ಸೋಲಿನ ಭಯದಿಂದ ಬಿಜೆಪಿಯಿಂದ ವಿಧಾನಸಭೆ ಚುನಾವಣೆ ಮುಂದೂಡುವ ಪ್ರಯತ್ನ

ಬೆಂಗಳೂರು, ಮಾ.2- ಸೋಲಿನ ಭಯದಿಂದ ಬಿಜೆಪಿ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಅವಧಿ ಮೇ 28ಕ್ಕೆ ಮುಗಿಯಲಿದೆ. ಅಷ್ಟರೊಳಗಾಗಿ ಚುನಾವಣೆ ನಡೆದು ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಬೇಕು. ಆದರೆ, ಕೇಂದ್ರ ಸರ್ಕಾರ ಚುನಾವಣೆಯನ್ನು ಮುಂದೂಡುವ ಪ್ರಯತ್ನ ಮಾಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೂರು ಬಾರಿ ಕರ್ನಾಟಕಕ್ಕೆ ಬಂದ ನಂತರವೂ ಇಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಈಗ ಚುನಾವಣೆ ನಡೆದರೆ ಬಿಜೆಪಿ ಸೋಲಲಿದೆ ಎಂಬ ಲೆಕ್ಕಾಚಾರದಿಂದಾಗಿ ಚುನಾವಣೆಯನ್ನು ಮುಂದೂಡುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಇವರು ಎಷ್ಟೇ ಪ್ರಯತ್ನ ಮಾಡಿದರೂ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಚುನಾವಣೆಯನ್ನು ಮುಂದೂಡಬೇಕಾದರೆ ಸಂವಿಧಾನ ತಿದ್ದುಪಡಿ ಆಗಬೇಕು. ಬಿಜೆಪಿಯವರು ಮೊಂಡುತನದಿಂದ ಅಂತಹ ಸಾಹಸಕ್ಕೆ ಕೈ ಹಾಕಿದರೂ ಹಾಕಬಹುದು ಎಂದು ಜಾರ್ಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ