ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ

ಬೆಂಗಳೂರು, ಮಾ.7- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ ನೀಡಿದ್ದು, ಅರ್ಥಪೂರ್ಣ ಆಚರಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇನ್ನೆರಡು ತಿಂಗಳಲ್ಲಿ ವಿಟಿಯು ನೂರು ವರ್ಷ ಪೂರೈಸಲಿದೆ. ಶತಮಾನೋತ್ಸವ ಆಚರಣೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು 25 ಕೋಟಿ ರೂ.ಗಳ ಅನುದಾನದ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟದ್ದರು. ಅದರಂತೆ ಅನುದಾನ ಒದಗಿಸಲಾಗಿದೆ. ಉತ್ತಮ ಶಿಕ್ಷಣ ಸಂಸ್ಥೆಯಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಯಶಸ್ವಿ ನೂರು ವರ್ಷ ಪೂರೈಸುತ್ತಿರುವುದು ಶ್ಲಾಘನೀಯ. ಅದರ ಅರ್ಥಪೂರ್ಣ ಆಚರಣೆಯಾಗಬೇಕು ಎಂದು ಹೇಳಿದರು.
ಮೊದಲು ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಉಚಿತ ಲ್ಯಾಪ್‍ಟಾಪ್ ನೀಡುತ್ತಿತ್ತು. ಈಗ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ಗಳನ್ನು ಉಚಿತವಾಗಿ ನೀಡುತ್ತಿದೆ. 1ನೆ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣವನ್ನು ಸರ್ಕಾರ ನೀಡುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಕೈಗೆಟಕುವಂತೆ ಇರಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಚಾಮರಾಜಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳ ಉದ್ಘಾಟನೆ ಮಾಡಿದರು. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿ ಚಿನ್ನ ಲೇಪಿತ ಕಿರೀಟ ಹಾಗೂ ಖಡ್ಗ ನೀಡಿ ಸನ್ಮಾನಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ