ಸಚಿವ ಎಚ್.ಸಿ.ಮಹದೇವಪ್ಪ ಮುಂದಿನ ಮುಖ್ಯಮಂತ್ರಿಯಾಗಲಿ: ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್

ಸಚಿವ ಎಚ್.ಸಿ.ಮಹದೇವಪ್ಪ ಮುಂದಿನ ಮುಖ್ಯಮಂತ್ರಿಯಾಗಲಿ: ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್
ಬೆಂಗಳೂರು, ಮಾ.8-ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್ ಒತ್ತಾಯಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ ಎಸ್ಸಿ-ಎಸ್ಟಿ ಜಾಗೃತಿ ನೌಕರರ 3ನೇ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಮಹದೇವಪ್ಪ ಅವರು ಸಮುದಾಯಗಳ ಬಗ್ಗೆ ಕಳಕಳಿ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟ ಅವರು, ಬಡ್ತಿ ಮೀಡಲಾತಿ ವಿಷಯದಲ್ಲಿ ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡು ಎಲ್ಲ ಇಲಾಖೆಗಳ ಜ್ಯೇಷ್ಠ್ಯತಾ ಪಟ್ಟಿಯನ್ನು ಸಿದ್ದಪಡಿಸಿವೆ. ಸಂವಿಧಾನದ 77ನೇ ತಿದ್ದುಪಡಿಯಲ್ಲಿ ಸರ್ಕಾರಿ ನೌಕರಿಯಲ್ಲಿರುವ ಎಸ್ಸಿ-ಎಸ್ಟಿ ಸಮುದಾಯಕ್ಕೆ ಬಡ್ತಿಯಲ್ಲಿ ಮೀಸಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಸುತ್ತೋಲೆ ಹೊರಡಿಸುವಾಗ ಕ್ಲಾಸ್ 1 ಜೂನಿಯರ್ ಹುದ್ದೆಗಳಿಗೆ ಎಂದು ನಮೂದಿಸಿರುವುದು ಗೊಂದಲ ಸೃಷ್ಟಿಸಿದೆ ಎಂದರು.
ಮೂಲ ತಿದ್ದುಪಡಿಯಲ್ಲಿ ಎಲ್ಲ ವರ್ಗದ ಹುದ್ದೆಗಳಿಗೂ ಬಡ್ತಿ ಮೀಸಲಾತಿ ಅನ್ವಯವಾಗುತ್ತದೆ. ಇದು ನ್ಯಾಯಾಲಯದ ಮುಂಬಡ್ತಿ ನಿಯಮಾವಳಿಗಳನ್ನೇ ರದ್ದುಪಡಿಸಿದೆ ಎಂದು ವಾದಿಸಲಾಗುತ್ತಿದೆ. ಇದು ಸರಿಯಲ್ಲ. ಈಗಾಗಲೇ ನೀಡಿರುವ ಬಡ್ತಿಯಲ್ಲಿ ಶೇ.18ರ ಪ್ರಮಾಣವನ್ನು ನೀಡಲಾಗಿದೆ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಹೇಳಿದರು.
ದಲಿತ ನೌಕರರಿಗೆ ಉದ್ದೇಶ ಪೂರ್ವಕವಾಗಿ ಕಿರುಕುಳ ನೀಡಲಾಗುತ್ತಿದೆ. ಯಾವುದೇ ಬಡ್ತಿ ನೀಡುವ ಸಂದರ್ಭದಲ್ಲಿ ಸಂವಿಧಾನದ ಮೀಸಲಾತಿ ಪಾಲಿಸಬೇಕು. ವೈಯೋಮಿತಿ ಸಡಿಲಿಕೆ ವಿಷಯದಲ್ಲಿ ಸ್ಪಷ್ಟವಾಗಿ ಕಾನೂನು ಪಾಲನೆ ಮಾಡಬೇಕೆಂದು ಒತ್ತಾಯಿಸಿದರು.
ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಸಾಹಿತಿ ಕೆ.ಬಿ.ಸಿದ್ದಯ್ಯ, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಪ್ರಸಾದ್ ರೋಟ್ಲೆ, ಸಂಘದ ಗೌರವಾಧ್ಯಕ್ಷ ಆರ್.ಸೋಮಶೇಖರ್, ಸತ್ಯನಾರಾಯಣ ಮತ್ತಿತರರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ