ಜನನಾಯಕರ ಪ್ರತಿಮೆಗಳ ಧ್ವಂಸ, (ಪಿಎನ್‍ಬಿ) ಹಗರಣ ಮತ್ತು ಕಾವೇರಿ ಜಲ ವಿವಾದ ಕುರಿತು ಇಂದೂ ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಭಾರೀ ಗದ್ದಲ-ಕೋಲಾಹಲ

ನವದೆಹಲಿ, ಮಾ.13- ದೇಶದ ವಿವಿಧ ಭಾಗಗಳಲ್ಲಿ ಜನನಾಯಕರ ಪ್ರತಿಮೆಗಳ ಧ್ವಂಸ, ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ, ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಹಾಗೂ ಮತ್ತಿತರ ವಿಷಯಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದೂ ಕೂಡ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ ಉಭಯ ಸದನಗಳ ಕಲಾಪ ಮುಂದೂಡಲಾಗಿದೆ.

ಬಜೆಟ್ ಅಧಿವೇಶದ ಸತತ ಏಳನೆ ದಿನವೂ ವಿವಿಧ ವಿವಾದಗಳು ಕಲಾಪವನ್ನು ಬಲಿ ತೆಗೆದುಕೊಂಡಿವೆ. ಮಾ.5ರಿಂದಲೂ ಉಭಯ ಸದನಗಳಲ್ಲಿ ಯಾವುದೇ ಕಲಾಪ ನಡೆಯದೆ ಅದೇ ರಾಗ-ಅದೇ ಹಾಡು ಮುಂದುವರಿದಂತಾಗಿದೆ. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್, ಟಿಎಂಸಿ ಪಿಎನ್‍ಬಿ ಬ್ಯಾಂಕ್ ಹಗರಣ ವಿಷಯ ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿತು. ಎನ್‍ಡಿಎ ಮಿತ್ರ ಪಕ್ಷ ಟಿಡಿಪಿ ಮತ್ತು ಟಿಆರ್‍ಎಸ್ ಸದಸ್ಯರು ಆಂಧ್ರಪ್ರದೇಶಕ್ಕಾಗಿ ವಿಶೇಷ ಪ್ಯಾಕೇಜ್‍ಗಾಗಿ ತನ್ನ ಬೇಡಿಕೆಯನ್ನು ಯಥಾ ಪ್ರಕಾರ ಮುಂದುವರಿಸಿದರು. ಇದೇ ವೇಳೆ ಎಐಎಡಿಎಂಕೆ ಮತ್ತು ಡಿಎಂಕೆ ಸದಸ್ಯರು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದು ಧರಣಿ ನಡೆಸಿದರು. ಕಳೆದ ಆರು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಸುಮಿತ್ರ ಮಹಾಜನ್ ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಮತ್ತೆ ಮತ್ತೆ ಪ್ರತಿಪಕ್ಷಗಳಲ್ಲಿ ಮನವಿ ಮಾಡಿದರು. ಆದರೆ, ಇದಕ್ಕೆ ಓಗೊಡದ ಪ್ರತಿಭಟನಾನಿರತ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಸ್ಥಳಕ್ಕೆ ಧಾವಿಸಿ ಧರಣಿ ನಡೆಸಿದರು. ಪ್ರತಿಭಟನಾನಿರತ ಸದಸ್ಯರನ್ನು ಸಮಾಧಾನಗೊಳಿಸಲು ಯತ್ನಿಸಿ ವಿಫಲರಾದ ಸುಮಿತ್ರಾ ಮಹಾಜನ್ ಕಲಾಪವನ್ನು 12 ಗಂಟೆಗೆ ಮುಂದೂಡಿದರು. ಮತ್ತೆ ಕಲಾಪ ಸಮಾವೇಶಗೊಂಡಾಗ ಅದೇ ಪರಿಸ್ಥಿತಿ ಮುಂದುವರಿದು ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು. ಇದರೊಂದಿಗೆ ಸತತ ಏಳು ದಿನಗಳಿಂದ ಲೋಕಸಭೆ ಕಲಾಪಕ್ಕೆ ಅಡ್ಡಿಯಾಗಿದೆ.

ರಾಜ್ಯಸಭೆಯಲ್ಲೂ ಗದ್ದಲ: ಸಂಸತ್ತಿನ ಮುಂದುವರೆದ ಬಜೆಟ್ ಅಧಿವೇಶನದ ಆರನೆ ದಿನವೂ ವಿವಿಧ ರಾಜ್ಯಗಳಲ್ಲಿ ಜನನಾಯಕರ ಪ್ರತಿಮೆ ಧ್ವಂಸ, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‍ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪವನ್ನು ಬಲಿ ತೆಗೆದುಕೊಂಡಿವೆ.
ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಎಂ.ವೆಂಕಯ್ಯನಾಯ್ಡು ಆರ್ಚರಿ ವಿಶ್ವಕಪ್ ಮತ್ತು ಮೆಕ್ಸಿಕೋದ ಐಎಸ್‍ಎಸ್‍ಎಫ್ ವಿಶ್ವ ಶೂಟಿಂಗ್ ಪಂದ್ಯಾವಳಿಯಲ್ಲಿ ಭಾರತದ ಪಟುಗಳ ಸಾಧನೆಯನ್ನು ಶ್ಲಾಘಿಸಿದರು.

ಇದೇ ವೇಳೆ ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರು ಪಿಎನ್‍ಬಿ ಹಗರಣ ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಟಿಡಿಪಿ ಸದಸ್ಯರು ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿಗಿಪಟ್ಟು ಮುಂದುವರಿಸಿದರು. ಇದರಿಂದಾಗಿ ಸದನದಲ್ಲಿ ಭಾರೀ ಗದ್ದಲ-ಕೋಲಾಹಲ ನಿರ್ಮಾಣವಾಯಿತು.

ಪ್ರತಿಭಟನಾನಿರತ ಸದಸ್ಯರನ್ನು ಸಮಾಧಾನಪಡಿಸಲು ಸಭಾಪತಿ ವೆಂಕಯ್ಯನಾಯ್ಡು ಪುನರಾವರ್ತಿತ ಮನವಿ ಮಾಡಿದರೂ ಪರಿಸ್ಥಿತಿ ತಿಳಿಗೊಳ್ಳಲಿಲ್ಲ. ಇದರಿಂದ ಬೇಸತ್ತ ನಾಯ್ಡು ಅವರು ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿದರು. ಮತ್ತೆ ಕಲಾಪ ಸಮಾವೇಶಗೊಂಡಾಗ ಇದೇ ಪರಿಸ್ಥಿತಿ ಮುಂದುವರೆಯಿತು. ಟಿಎಂಸಿ, ಎಐಎಡಿಎಂಕೆ, ಡಿಎಂಕೆ ಮತ್ತು ಟಿಡಿಪಿ ಸದಸ್ಯರು ತಮ್ಮ ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ಮುಂದುವರೆಸಿದ್ದರಿಂದ ಸಭಾಪತಿಯವರು ಕಲಾಪವನ್ನು
ಮಧ್ಯಾಹ್ನ 2ಕ್ಕೆ ಮುಂದೂಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ