ಸಂಸತ್ತಿನ ಉಭಯ ಸದನಗಳಲ್ಲೂ ಯಥಾಪ್ರಕಾರ ಭಾರೀ ಗದ್ದಲ-ಕೋಲಾಹಲ:

ನವದೆಹಲಿ, ಮಾ.23- ಸಂಸತ್ತಿನ ಉಭಯ ಸದನಗಳಲ್ಲೂ 16ನೇ ದಿನವಾದ ಇಂದೂ ಕೂಡ ಅದೇ ರಾಗ ಅದೇ ಹಾಡು ಮುಂದುವರಿದು ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, ಕಾವೇರಿ ಜಲವಿವಾದ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಯಥಾಪ್ರಕಾರ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.
ಮಾ.5ರಿಂದಲೂ ಉಭಯ ಸದನಗಳಲ್ಲಿ ಕಲಾಪ ಸುಗಮವಾಗಿ ನಡೆಯದೇ ಯಥಾಸ್ಥಿತಿ ಬಿಕ್ಕಟ್ಟು ಮುಂದುವರಿದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಇಂದೂ ಸಹ ಆಸ್ಪದವಾಗಿಲ್ಲ.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಪ್ರಶ್ನೋತ್ತರ ಕಲಾಪ ನಡೆಸಲು ಮುಂದಾದರು. ಆದರೆ, ವಿರೋಧ ಪಕ್ಷಗಳು ತಮ್ಮ ವಿಷಯಗಳಿಗೆ ಪಟ್ಟು ಹಿಡಿದು ಧರಣಿ ಮುಂದುವರಿಸಿದವು.
ಪ್ರತಿಭಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸುಮಿತ್ರ ಮಹಾಜನ್ ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಮತ್ತೆ ಮತ್ತೆ ಪ್ರತಿಪಕ್ಷಗಳಲ್ಲಿ ಮನವಿ ಮಾಡಿದರೂ ಫಲ ನೀಡಲಿಲ್ಲ. ಅವರು ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿದರು.
ಪುನ: ಕಲಾಪ ಸಮಾವೇಶಗೊಂಡಾಗ ಅದೇ ಪರಿಸ್ಥಿತಿ ಮುಂದುವರೆಯಿತು. ಸದನ ಕಲಾಪ ಸುಗಮವಾದರೆ ಮಾತ್ರ ಟಿಡಿಪಿ ಅವಿಶ್ವಾಸ ನಿರ್ಣಯ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಧ್ಯಕ್ಷರು ಪುನರುಚ್ಚರಿಸಿ ಸದನವನ್ನು ನಾಳೆಗೆ ಮುಂದೂಡಿದರು.
ಸಂಸತ್ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಸುಮಿತ್ತಾ ಮಹಾಜನ್ ಇಂದು ಸರ್ವ ಪಕ್ಷಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಲಿದ್ದಾರೆ.
ಮೇಲ್ಮನೆಯಲ್ಲೂ ಅದೇ ಸ್ಥಿತಿ :
ಮುಂದುವರೆದ ಬಜೆಟ್ ಅಧಿವೇಶನದ 16ನೇ ದಿನವೂ ಇದೇ ವಿಷಯಗಳು ಮೇಲ್ಮನೆ ಕಲಾಪವನ್ನು ಬಲಿ ತೆಗೆದುಕೊಂಡಿವೆ.
ಇದರಿಂದಾಗಿ ಸದನದಲ್ಲಿ ಭಾರೀ ಗದ್ದಲ-ಕೋಲಾಹಲ ನಿರ್ಮಾಣವಾಯಿತು. ಪ್ರತಿಭಟನಾನಿರತ ಸದಸ್ಯರನ್ನು ಸಮಾಧಾನಪಡಿಸಲು ಸಭಾಪತಿ ವೆಂಕಯ್ಯ ನಾಯ್ಡು ಪುನರಾವರ್ತಿತ ಮನವಿ ಮಾಡಿದರೂ ಪರಿಸ್ಥಿತಿ ತಿಳಿಗೊಳ್ಳಲಿಲ್ಲ.
ಇದರಿಂದ ಬೇಸತ್ತ ನಾಯ್ಡು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಸದಸ್ಯರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚರ್ಚೆಗೆ ಅವಕಾಶ ನೀಡುವುದಾಗಿ ಸರ್ಕಾರ ಸ್ಪಷ್ಟಪಡಿಸಿದ್ದರೂ ಇಂಥ ನಡವಳಿಕೆ ಸಲ್ಲದು ಎಂದು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ