ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ

ಮೈಸೂರು, ಮಾ.27- ಶ್ರೀ ನಂಜುಂಡೇಶ್ವರನ ಆಶೀರ್ವಾದ ನಮ್ಮ ಮೇಲಿದೆ. ನಾವು ಕಾಂಗ್ರೆಸ್, ಬಿಜೆಪಿಗಿಂತ ಹತ್ತು ಹೆಜ್ಜೆ ಮುಂದೆ ಇದ್ದು, ಅಧಿಕಾರ ಹಿಡಿಯಲಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾನು ನಂಜುಂಡೇಶ್ವರನ ದರ್ಶನಕ್ಕೆ ಹೋಗುತ್ತಿದ್ದೇನೆ. ಈ ಸಂದರ್ಭದಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಆ ದೇವರ ಆಶೀರ್ವಾದ ನಮ್ಮ ಮೇಲಿದೆ ಎಂದು ತಿಳಿಸಿದರು.

ನಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಬಾಕಿ ಇರುವ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ಹೇಳಿದರು.

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ತಿಳಿಸಿದರು.
ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಮಾಡಿಕೊಳ್ಳುವುದೂ ಇಲ್ಲ, ನಾವು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್, ಬಿಜೆಪಿ ಸಮಾನ ಎದುರಾಳಿಗಳು ಎಂದರು.
ರಾಜ್ಯದ ಜನತೆ ಕಾಂಗ್ರೆಸ್‍ಅನ್ನು ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ಮಾಡುವುದು ನಮಗೆ ಗೊತ್ತು ಎಂದು ಹೇಳಿದರು.

ಜೆಡಿಎಸ್ ಕಂಡರೆ ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿಯೇ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಸಿ-4 ಸಮೀಕ್ಷೆ ಮಾಡಿದವರು ಮುಖ್ಯಮಂತ್ರಿಗಳ ಕಾಂಪೌಂಡ್‍ನಲ್ಲಿರುವರು ಎಂದು ಹೇಳಿದ ಅವರು ಜೆಡಿಎಸ್‍ಗೆ 28 ಸ್ಥಾನ ಬರಲಿದೆ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ. ಕಾಂಗ್ರೆಸ್‍ಗೆ 28, ನಮ್ಮ ಪಕ್ಷಕ್ಕೆ 128 ಸ್ಥಾನ ಬರಲಿದೆ ಎಂದು ಸಮರ್ಥಿಸಿಕೊಂಡರು.
ಚುನಾವಣೆ ದಿನಾಂಕ ಘೋಷಣೆಯಾಗುವುದು ಗೊತ್ತಿದ್ದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾತ್ರೀನೆ ಹಲವಾರು ಕಡತಗಳಿಗೆ ಸಹಿ ಮಾಡಿದ್ದಾರೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಸಿಎಂ ಮಾತು ಕೇಳಿದರೆ ಅಧಿಕಾರಿಗಳೇ ನೀವು ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಿಎಂ ರಾತ್ರೋರಾತ್ರಿ ಕಡತಗಳಿಗೆ ಸಹಿ ಹಾಕಿರುವುದನ್ನು ನೋಡಿದರೆ ಇದು ಅವರ ಭ್ರಷ್ಟಾಚಾರದ ಮುಖವಾಡವನ್ನು ಬಯಲು ಮಾಡಿದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ