ಕಾವೇರಿ ಜಲವಿವಾದ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದೂ ಕೂಡ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿ:

ನವದೆಹಲಿ, ಏ.2-ಕಾವೇರಿ ಜಲವಿವಾದ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದೂ ಕೂಡ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.
ಮಾ.5ರಿಂದಲೂ ಉಭಯ ಸದನಗಳಲ್ಲಿ ಕಲಾಪ ಸುಗಮವಾಗಿ ನಡೆಯದೇ ಯಥಾಸ್ಥಿತಿ ಬಿಕ್ಕಟ್ಟು ಮುಂದುವರಿದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಇಂದೂ ಸಹ ಆಸ್ಪದವಾಗಿಲ್ಲ. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಪ್ರಶ್ನೋತ್ತರ ಕಲಾಪ ನಡೆಸಲು ಮುಂದಾದರು. ಆದರೆ, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಬಿಗಿಪಟ್ಟು ಮುಂದುವರಿಸಿರುವ ಎಐಎಡಿಎಂಕೆ ಸದಸ್ಯರು ಧರಣಿ ಮುಂದುವರಿಸಿದರು.
ಪ್ರತಿಭಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸುಮಿತ್ರ ಮಹಾಜನ್ ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಮತ್ತೆ ಮತ್ತೆ ಮನವಿ ಮಾಡಿದರೂ ಯಥಾಸ್ಥಿತಿ ಮುಂದುವರಿಯಿತು. ಇದರಿಂದಾಗಿ ಅವರು ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿದರು.
ಪುನಃ ಕಲಾಪ ಸಮಾವೇಶಗೊಂಡಾಗ ಅದೇ ಪರಿಸ್ಥಿತಿ ಮುಂದುವರೆಯಿತು. ಸದನ ಕಲಾಪ ಸುಗಮವಾದರೆ ಮಾತ್ರ ಟಿಡಿಪಿ ಅವಿಶ್ವಾಸ ನಿರ್ಣಯ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಧ್ಯಕ್ಷರು ಪುನರುಚ್ಚರಿಸಿ ಸದನವನ್ನು ನಾಳೆಗೆ ಮುಂದೂಡಿದರು.
ಮೇಲ್ಮನೆ ಕಲಾಪ ನಾಳೆಗೆ ಮುಂದೂಡಿಕೆ :
ಮುಂದುವರೆದ ಬಜೆಟ್ ಅಧಿವೇಶನದ 18 ನೇ ದಿನವೂ ಇದೇ ವಿಷಯಗಳು ಮೇಲ್ಮನೆ ಕಲಾಪವನ್ನು ಬಲಿ ತೆಗೆದುಕೊಂಡಿವೆ. ಇದರಿಂದಾಗಿ ಸದನದಲ್ಲಿ ಭಾರೀ ಗದ್ದಲ-ಕೋಲಾಹಲ ನಿರ್ಮಾಣವಾಯಿತು. ಪ್ರತಿಭಟನಾನಿರತ ಸದಸ್ಯರನ್ನು ಸಮಾಧಾನಪಡಿಸಲು ಸಭಾಪತಿ ವೆಂಕಯ್ಯನಾಯ್ಡು ಪುನರಾವರ್ತಿತ ಮನವಿ ಮಾಡಿದರೂ ಪರಿಸ್ಥಿತಿ ತಿಳಿಗೊಳ್ಳಲಿಲ್ಲ. ಇದರಿಂದ ಬೇಸತ್ತ ನಾಯ್ಡು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಸದಸ್ಯರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚರ್ಚೆಗೆ ಅವಕಾಶ ನೀಡುವುದಾಗಿ ಸರ್ಕಾರ ಸ್ಪಷ್ಟಪಡಿಸಿದ್ದರೂ ಇಂಥ ನಡವಳಿಕೆ ಸಲ್ಲದು ಎಂದು ಕಲಾಪವನ್ನು ಮುಂದಿನ ಸೋಮವಾರಕ್ಕೆ ಮುಂದೂಡಿದರು.
ರಾಜ್ಯಸಭೆ ಸದಸ್ಯ ರಾಜೀನಾಮೆ :
ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ಎಐಎಡಿಂಎಕೆಯ ರಾಜ್ಯಸಭಾ ಸದಸ್ಯರು ಮುತ್ತುಕುರುಪ್ಪನ್ನ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಸಭಾಪತಿ ವೆಂಕಯ್ಯನಾಯ್ಡು ಅವರಿಗೆ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ