ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಜಿಲ್ಲಾ ಪ್ರವಾಸ ಕೈಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕೂಡಾ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ:

ತುಮಕೂರು, ಏ.3-ಒಂದು ಕಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಜಿಲ್ಲಾ ಪ್ರವಾಸ ಕೈಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕೂಡಾ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಾಳೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಿಂದ ಶಿರಾ ಮೂಲಕ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಸ್‍ನಲ್ಲಿ ರಾಹುಲ್‍ಗಾಂಧಿಯವರು ಮಧ್ಯಾಹ್ನ 2 ಗಂಟೆಗೆ ಆಗಮಿಸಿ ನೇರ ಸಿದ್ದಗಂಗಾ ಮಠಕ್ಕೆ ತೆರಳುವರು.
ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ 111ನೇ ವರ್ಷದ ಜನ್ಮದಿನೋತ್ಸವ ಶುಭಾಶಯ ಕೋರಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆಯುವರು. ನಂತರ ಕ್ಯಾತ್ಸಂದ್ರ, ಬಟವಾಡಿ, ಶಿವಕುಮಾರಸ್ವಾಮಿ ವೃತ್ತ, ಭದ್ರಮ್ಮ ವೃತ್ತದಿಂದ ನಗರದ ಟೌನ್‍ಹಾಲ್ ವೃತ್ತಕ್ಕೆ ಆಗಮಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವರು. ಅಲ್ಲಿಂದ ಲಕ್ಕಪ್ಪ ವೃತ್ತದಿಂದ ಬಸ್‍ನಲ್ಲೇ ಕುಣಿಗಲ್‍ಗೆ ತೆರಳಿ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಮಾಗಡಿಗೆ ತೆರಳುವರು.
ನಾಳೆ ತುಮಕೂರಿಗೆ ರಾಹುಲ್‍ಗಾಂಧಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಶಾಸಕರಾದ ಷಡಕ್ಷರಿ, ಕೆ.ಎನ್.ರಾಜಣ್ಣ, ಡಾ.ರಫೀಕ್ ಅಹಮ್ಮದ್, ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ, ರಾಜ್ಯ ಯುವ ಘಟಕದ ಅಧ್ಯಕ್ಷ ಆರ್.ರಾಜೇಂದ್ರ, ಮಾಜಿ ಜಿಲ್ಲಾಧ್ಯಕ್ಷ ಶಫಿ ಅಹಮ್ಮದ್, ಮುಖಂಡರು ಇಂದು ನಗರಾದ್ಯಂತ ಮಿಂಚಿನ ಸಂಚಾರ ಮಾಡಿ ರಾಹುಲ್‍ಗಾಂಧಿಯವರ ಸ್ವಾಗತಕ್ಕೆ ಸಕಲ ಸಿದ್ದತೆ ಕೈಗೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ