ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಆದೇಶ ವಾಪಸ್ ಪಡೆದ ಪ್ರಧಾನಿ ಕಾರ್ಯಾಲಯ

New Delhi: Prime Minister Narendra Modi in the Lok Sabha in New Delhi on Wednesday. PTI Photo / TV GRAB(PTI2_8_2017_000050B)

ನವದೆಹಲಿ: ಏ-೩; ಮಹತ್ವದ ಬೆಳವಣಿಗೆಯೊಂದರಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಹೊರಡಿಸಿದ್ದ ಪ್ರಕಟಣೆಯನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ಹಿಂದಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೆ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಆಯ್ಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ಮಾತ್ರ ಇದೆ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಇಂದು ಬೆಳಗ್ಗೆಯಷ್ಟೇ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಸುಳ್ಳು ಸುದ್ದಿ ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲ ತಪ್ಪಿಗೆ ಆರು ತಿಂಗಳ ಮಟ್ಟಿಗೆ ಮತ್ತು ಎರಡನೇ ಬಾರಿಯ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ಪತ್ರಕರ್ತರ ಮಾನ್ಯತೆ ರದ್ದು ಮಾಡಲಾಗುವುದು. ಮೂರನೇ ಬಾರಿಗೆ ತಪ್ಪು ಮಾಡಿದಲ್ಲಿ ಶಾಶ್ವತವಾಗಿ ಮಾನ್ಯತೆ ರದ್ದು ಮಾಡಲಾಗುವುದು ಎಂದು ಹೇಳಿತ್ತು.

ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಭಾರತೀಯ ಪತ್ರಿಕಾ ಮಂಡಳಿಗೆ (ಪಿಸಿಐ) ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಸುದ್ದಿ ಪ್ರಸಾರಕರ ಸಂಘಟನೆ (ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್/ಎನ್‌ಬಿಎ)ಗೆ ವಹಿಸಲಾಗುವುದು. ಈ ಸಂಸ್ಥೆಗಳು 15 ದಿನಗಳ ಒಳಗೆ ನಿರ್ಣಯ ಕೈಗೊಳ್ಳಬೇಕೆಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ತಿಳಿಸಿತ್ತು. ಇಲಾಖೆ ಆದೇಶ ಪ್ರಕಟವಾಗುತ್ತಿದ್ದಂತೆಯೇ ಹಲವು ಪತ್ರಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ನೇರ ಪ್ರಧಾನಿ ಕಾರ್ಯಾಲಯಕ್ಕೆ ಈ ಸಂಬಂಧ ಟ್ಲೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಮೋದಿ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ.

PM Modi government,orders withdrawal,’fake news’ press release

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ