ಬೆಂಗಳೂರು, ಏ.4- ಭಾರತೀಯ ಜನತಾ ಪಾರ್ಟಿಗೆ ಇಂದು ಮಾಜಿ ಶಾಸಕರು ಹಾಗೂ ಕಳೆದ 2013ರಲ್ಲಿ ಮುನಿಸಿಕೊಂಡು ಪಕ್ಷ ತೊರೆದಿದ್ದ ಹಲವು ನಾಯಕರು ಇಂದು ಮಾತೃಪಕ್ಷಕ್ಕೆ ಮರಳಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತಿತರ ಮುಖಂಡರ ಸಮ್ಮುಖದಲ್ಲಿ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ನಾಗಪ್ಪ ಸಾಲೋಣಿ, ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಅನ್ವರಿ ಹಾಗೂ ಮಲ್ಲಿಕಾರ್ಜುನ ಕೂಬಾ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷದ ಧ್ವಜ ಸ್ವೀಕರಿಸಿ ಸೇರ್ಪಡೆಯಾದರು.
ಯತ್ನಾಳ್ ಸೇರ್ಪಡೆಗೆ ವಿಜಯಪುರದಲ್ಲಿ, ಕೂಬಾ ಸೇರ್ಪಡೆಗೆ ಬೀದರ್ನಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಈ ಹಿಂದೆ ಪಕ್ಷ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಇವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಲಾಯಿತು.
ಅದರಲ್ಲೂ ಮಲ್ಲಿಕಾರ್ಜುನ ಕೂಬಾ ಅವರು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿರುದ್ಧ ಹೇಳಿಕೆ ನೀಡಿದ್ದು, ಕ್ಷೇತ್ರದಲ್ಲೂ ಸಾಕಷ್ಟು ಭ್ರಷ್ಟಾಚಾರ ನಡೆಸಿರುವ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳದಂತೆ ಒತ್ತಾಯಿಸಲಾಯಿತು. ಈ ಹಂತದಲ್ಲಿ ಪಕ್ಷದ ಕಚೇರಿ ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.