ಸ್ಕ್ರೀನಿಂಗ್ ಕಮಿಟಿಯಲ್ಲಿ ಸಮಗ್ರವಾಗಿ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಏ.16-ಸ್ಕ್ರೀನಿಂಗ್ ಕಮಿಟಿಯಲ್ಲಿ ಸಮಗ್ರವಾಗಿ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಅತೃಪ್ತರ ಜೊತೆ ಮಾತುಕತೆ ನಡೆಸಿ ಸಮಾಧಾನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಲೆಕ್ಕಾಚಾರ ಹಾಕಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಟಿಕೆಟ್ ಹಂಚಿಕೆಗೂ ಮುನ್ನ ಹಲವಾರು ಸುತ್ತಿನ ಸಭೆಗಳು ನಡಿಡೆದಿವೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ಪ್ರತಿ ಕ್ಷೇತ್ರದ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಚುನಾವಣೆ ಎಂದ ಮೇಲೆ ಪ್ರತಿ ಕ್ಷೇತ್ರಕ್ಕೂ ಹಲವಾರು ಮಂದಿ ಅಕಾಂಕ್ಷಿಗಳಿರುವುದು ಸಹಜ. ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದಿದ್ದವರಿಗೆ ಪರ್ಯಾಯ ಅವಕಾಶ ಕಲ್ಪಿಸಲಾಗುವುದು. ನಮ್ಮಲ್ಲಿ ಯಾವುದೇ ಬಂಡಾಯ ಅಥವಾ ಭಿನ್ನಮತಗಳಿಲ್ಲ. ಅಸಮಾಧಾನಗೊಂಡಿರುವ ಆಕಾಂಕ್ಷಿಗಳ ಜೊತೆ ಮಾತುಕತೆ ನಡೆಸುತ್ತೇವೆ. ವಾತಾವರಣ ತಿಳಿಯಾಗಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ತಾಂತ್ರಿಕ ಕಾರಣದಿಂದಾಗಿ ಆರು ಕ್ಷೇತ್ರಗಳ ಟಿಕೆಟ್‍ನ್ನು ಘೋಷಣೆ ಮಾಡಿಲ್ಲ. ಒಂದೆರಡು ದಿನಗಳಲ್ಲಿ ಆರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ. ಶಾಂತಿನಗರ ಕ್ಷೇತ್ರದಿಂದ ಹ್ಯಾರಿಸ್ ಅವರಿಗೆ ಟಿಕೆಟ್ ನೀಡುವುದು ಖಚಿತ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ