ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಖ್ಯಮಂತ್ರಿ ಅವರೊಂದಿಗೆ ನಡೆದಿರುವ ಚರ್ಚೆ ಕೂಡ ಅಪೂರ್ಣ

ಬೆಂಗಳೂರು, ಏ.19-ಬಾದಾಮಿ, ತಿಪಟೂರು, ಜಗಳೂರು, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ಹಲವು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಕಾಂಗ್ರೆಸ್ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಸಂಬಂಧ ನಿನ್ನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಅವರೊಂದಿಗೆ ನಡೆದಿರುವ ಚರ್ಚೆ ಕೂಡ ಅಪೂರ್ಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಬಾದಾಮಿ, ಶಾಂತಿನಗರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಇರಾದೆ ಮುಖ್ಯಮಂತ್ರಿಗಳಿಗಿದ್ದಂತಿದೆ. ಶಾಂತಿನಗರದಲ್ಲಿ ಹಾಲಿ ಶಾಸಕ ಹ್ಯಾರೀಸ್ ಅವರ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವ ಗೊಂದಲ ಮುಂದುವರೆದಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಮತ್ತೊಂದು ಕ್ಷೇತ್ರದಲ್ಲಿ ಕಣಕ್ಕಿಳಿಯುವುದೇ ಬೇಡವೇ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.

ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸದೆ ಹಾಗೇ ಉಳಿಸಿಕೊಳ್ಳಲಾಗಿದೆ. ಮೊದಲು ಹೈಕಮಾಂಡ್ ಒಪ್ಪಿರಲಿಲ್ಲ. ನಿನ್ನೆ ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಇದೇ 24 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ಪಕ್ಷ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕು.

ಇನ್ನು ಬಾದಾಮಿಯಲ್ಲಿ ಈಗಾಗಲೇ ದೇವರಾಜ್ ಪಾಟೀಲ್ ಟಿಕೆಟ್ ನೀಡಲಾಗಿದೆ. ಹಾಲಿ ಶಾಸಕ ಡಿ.ಬಿ.ಚಿಮ್ಮನಕಟ್ಟಿ ತಮಗೇ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇನ್ನು ಆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ. ತಿಪಟೂರಿನಲ್ಲಿ ನಂಜಾಮರಿ-ಷಡಕ್ಷರಿ ನಡುವೆ ಪೈಪೆÇೀಟಿ ಮುಂದುವರೆದಿದೆ.

ಮಲ್ಲೇಶ್ವರದಲ್ಲಿ ಎಂ.ಆರ್.ಸೀತಾರಾಮ್ ಅವರು ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದು, ವಕೀಲರಾದ ದಿವಾಕರ್, ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದ ರೇಣು, ಗಿರೀಶ್ ಲಕ್ಕಣ್ಣ ಈ ಮೂವರಲ್ಲಿ ಒಬ್ಬರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಚರ್ಚೆ ನಡೆಸುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ