ಎಚ್.ಡಿ.ಕುಮಾರ ಸ್ವಾಮಿ ಅವರು 20 ತಿಂಗಳ ಆಡಳಿತಾವಧಿಯಲ್ಲಿ ನಡೆಸಿದ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದಾರೆ – ಪುತ್ರ ನಿಖಿಲ್ ಕುಮಾರ್

ಚಿತ್ರದುರ್ಗ, ಏ.21- ಎಚ್.ಡಿ.ಕುಮಾರ ಸ್ವಾಮಿ ಅವರು 20 ತಿಂಗಳ ಆಡಳಿತಾವಧಿಯಲ್ಲಿ ನಡೆಸಿದ ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಪುತ್ರ ನಿಖಿಲ್ ಕುಮಾರ್ ತಂದೆ ಪರ ಬ್ಯಾಟಿಂಗ್ ಮಾಡಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ಪರಶುರಾಮಪುರದಲ್ಲಿ ಪಕ್ಷದ ಅಭ್ಯರ್ಥಿ ರವೀಶ್‍ಕುಮಾರ್ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಕಡೆಗಣಿಸಿವೆ. ಕುಡಿಯುವ ನೀರಿನ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅಂದು ರಾಜಕೀಯ ಬೆಳವಣಿಗೆಯಿಂದ ನಮ್ಮ ತಂದೆ ಮುಖ್ಯಮಂತ್ರಿ ಆದರು. ಕೇವಲ 20 ತಿಂಗಳಲ್ಲಿ ಸಾಕಷ್ಟು ಜನಪರ ಆಡಳಿತ ನೀಡಿದ್ದಾರೆ ಎಂದು ಹೇಳಿದರು.
ಬಡವರ ಮನೆಯಲ್ಲಿ ವಾಸ್ತವ್ಯ ಹೂಡಿ ಅವರ ಕಷ್ಟ ಸುಖಗಳನ್ನು ಅರಿತು ಸಮಸ್ಯೆ ಪರಿಹರಿಸಲು ಯತ್ನಿಸಿದರು. ಅವರು ಅಧಿಕಾರದಲ್ಲಿದ್ದಾಗಲೇ ರೈತರ ಸಾಲ ಮನ್ನಾ ಮಾಡಿದ್ದಾರೆ. ನೀವು ಮನಸ್ಸು ಮಾಡಿ ಈ ಬಾರಿಯೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಕೋರಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರೆ ಖಂಡಿತಾ ಬಡ ಜನರು ಮತ್ತು ರೈತರ ಬದುಕು ಹಸನಾಗುತ್ತದೆ ಎಂದು ಹೇಳಿದ ಅವರು, ಜೆಡಿಎಸ್ ಅಭ್ಯರ್ಥಿ ರವೀಶ್‍ಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಪರಶುರಾಮ್‍ಪುರ ನಂತರ ಚಳ್ಳಕೆರೆ ನಗರದಲ್ಲಿ ನಿಖಿಲ್ ಕುಮಾರ್ ರೋಡ್ ಶೋ ನಡೆಸಿದರು. ಈ ವೇಳೆ ಅಭ್ಯರ್ಥಿ ರವೀಶ್‍ಕುಮಾರ್ ನಾಮಪತ್ರ ಸಲ್ಲಿಸಿದರು. ಜಿಪಂ ಸದಸ್ಯ ಮುತ್ತುರಾಜ್ ಮತ್ತಿತರರು ಸಾಥ್ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ