ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಎಷ್ಟೇ ಪ್ರಭಾವಿ ಅಭ್ಯರ್ಥಿ ನಿಂತರೂ ಅವರಿಗೆ ತಿರುಗೇಟು ನೀಡಲಿದ್ದಾರೆ – ಡಾ.ಯತೀಂದ್ರ

ಮೈಸೂರು,ಏ.21- ನಮ್ಮ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಎಷ್ಟೇ ಪ್ರಭಾವಿ ಅಭ್ಯರ್ಥಿ ನಿಂತರೂ ಅವರಿಗೆ ತಿರುಗೇಟು ನೀಡಲಿದ್ದಾರೆ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆಗೆ ಬಾದಾಮಿಯಿಂದ ಸ್ಪರ್ಧಿಸಲು ಹೈಕಮಾಂಡ್ ಸೂಚಿಸಿದರೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ ಎಂದು ಹೇಳಿದರು.
ಬಿಜೆಪಿಯಿಂದ ಶ್ರೀರಾಮುಲು ಅವರು ನಿಮ್ಮ ತಂದೆ ವಿರುದ್ದ ನಿಲ್ಲುತ್ತಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಷ್ಟೇ ಪ್ರಭಾವಿ ಅಭ್ಯರ್ಥಿ ನಿಂತರೂ ನಮ್ಮ ತಂದೆಯವರು ಅವರನ್ನು ಸೋಲಿಸುತ್ತಾರೆ ಎಂದರು.
ಮುಖ್ಯಮಂತ್ರಿಯಾಗಿ ನಮ್ಮ ತಂದೆ ಸಿದ್ದರಾಮಯ್ಯ ಅವರು ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದು , ಹಲವು ಅಭಿವೃದ್ದಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಹಾಗಾಗಿ ಅವರ ಗೆಲುವು ನಿಶ್ಚಿತ ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಯತೀಂದ್ರ, ನಾನು ನನ್ನ ತಂದೆ ಪರ ಬಾದಾಮಿಯಲ್ಲಿ ಪ್ರಚಾರ ಮಾಡಲು ತೆರಳುವುದಿಲ್ಲ. ನನಗೆ ವರುಣಾ-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ನೇಮಿಸಲಾಗಿದೆ. ಹಾಗಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ