ಕಾಂಗ್ರೆಸ್ ಪಕ್ಷ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಏ.22-ಕಾಂಗ್ರೆಸ್ ಪಕ್ಷ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈವರೆಗೂ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡಿಯೇ ಇಲ್ಲ. ಸದಾನಂದಗೌಡ ಅವರು ನಕಲಿ ದಾಖಲೆಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ಸುಳ್ಳಿ ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದು ಹೇಳಿದರು.

ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಲಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಮಾಡಿರುವ ಆರೋಪ ಆಧಾರರಹಿತವಾಗಿದೆ. ಕಾಂಗ್ರೆಸ್‍ನಿಂದ ಎಲ್ಲವನ್ನೂ ಪಡೆದ ಛಲವಾದಿ ನಾರಾಯಣಸ್ವಾಮಿ ಅವರು ದೇವನಹಳ್ಳಿ ಕ್ಷೇತ್ರದಿಂದ ತಮ್ಮ ಟಿಕೆಟ್ ಸಿಗಲಿಲ್ಲವೆಂಬ ಒಂದೇ ಕಾರಣಕ್ಕೆ ಟಿಕೆಟ್ ಮಾರಾಟ ಮಾಡಲಾಗಿದೆ ಎಂದು ಆರೋಪ ಮಾಡಿರುವುದು ಸಮಂಜಸವಲ್ಲ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿತ್ತು. ಸಿದ್ಧಾಂತಗಳನ್ನೆಲ್ಲ ಗಾಳಿಗೆ ತೂರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.

ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ನಾರ್ಕೋ ಅನಾಲಿಸಿಸ್ ಪರೀಕ್ಷೆಗೆ ತಪ್ಪಿಸಿಕೊಳ್ಳುವುದರಲ್ಲಿ ಏನೋ ಇದೆ ಎಂಬ ಅನುಮಾನ ವ್ಯಕ್ತಪಡಿಸಿದ ದಿನೇಶ್‍ಗುಂಡೂರಾವ್ ನ್ಯಾಯಾಲಯ ಮಧ್ಯಪ್ರವೇಶ ಮಾಡಬೇಕೆಂದು ಹೇಳಿದರು.
ಇದೊಂದು ಕ್ರೂರ ಕೊಲೆಯಾಗಿದ್ದು, ತನಿಖೆಗೆ ಮಂಪರು ಪರೀಕ್ಷೆಗೆ ಸಹಕರಿಸದಿರುವುದರ ಹಿಂದೆ ಏನೋ ಅನುಮಾನ ಇದೆ ಎಂದು ಗುಂಡೂರಾವ್ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ