ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನ

ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವುದು ವಿಳಂಬವಾದಂತೆ ನಾಮಪತ್ರ ಸಲ್ಲಿಕೆಯೂ ವಿಳಂಬವಾಯಿತು.

ನಾಮಪತ್ರ ಸಲ್ಲಿಕೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದ್ದರೂ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಇನ್ನೂ ಆಯ್ಕೆಯ ಕಸರತ್ತು ನಡೆಸುತ್ತಿವೆ. ಏ.17 ರಿಂದ 22ರವರೆಗೆ ರಾಜ್ಯದಲ್ಲಿ ಒಟ್ಟು 919 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದಾರೆ. ಬಿಜೆಪಿಯಿಂದ 140, ಕಾಂಗ್ರೆಸ್‍ನಿಂದ 149, ಜೆಡಿಎಸ್‍ನಿಂದ 115, ಪಕ್ಷೇತರರು 377 ಮಂದಿ ಸೇರಿದಂತೆ ಇತರೆ ಪಕ್ಷಗಳಿಂದಲೂ ನಾಮಪತ್ರ ಸಲ್ಲಿಸಲಾಗಿತ್ತು.

ಇಂದೂ ಕೂಡ ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ನಾಳೆ ಮಂಗಳವಾರವಾದ್ದರಿಂದ ನಾಮಪತ್ರ ಸಲ್ಲಿಸುವವರ ಸಂಖ್ಯೆ ವಿರಳವಾಗಿರಲಿದೆ.

ಟಿಕೆಟ್ ಆಯ್ಕೆ ಅಂತಿಮವಾಗದ ಕೊನೆ ಕ್ಷಣದಲ್ಲಿ ಬಿ ಫಾರಂ ಸಿಕ್ಕಂತಹ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಳೆ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ಏ.25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ತಿರಸ್ಕøತವಾದ ಹಾಗೂ ಕ್ರಮಬದ್ಧವಾದ ನಾಮಪತ್ರಗಳ ಪಟ್ಟಿಯನ್ನು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಪ್ರಕಟಿಸಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯಲು ಏ.27ರವರೆಗೂ ಅವಕಾಶವಿದ್ದು, ಅಂದು ಸಂಜೆ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಲ್ಲಿಯವರೆಗೂ ರಾಜಕೀಯ ಪಕ್ಷಗಳ ಸ್ಪರ್ಧಾಕಾಂಕ್ಷಿಗಳ ಬಂಡಾಯ ಶಮನಗೊಳಿಸುವ ಪ್ರಯತ್ನವನ್ನು ವರಿಷ್ಠರು ಮಾಡುತ್ತಿರುತ್ತಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ