ಇಂದಿನಿಂದ ಮೂರು ದಿನಗಳ ಕಾಲ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಪ್ರಚಾರ

ಬೆಂಗಳೂರು, ಮೇ 7-ಇಂದಿನಿಂದ ಮೂರು ದಿನಗಳ ಕಾಲ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಕಾರ್ಯದಲ್ಲಿ ಬಿಸಿಯಾಗಲಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಮಾಲೂರಿಗೆ ಆಗಮಿಸಿದ ಅವರು ಪೆಟ್ರೋಲ್ ದರ ಏರಿಕೆ ವಿರೋಧಿಸಿ ಸೈಕಲ್ ಏರಿ ಬಂದರು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು. ನಂತರ ಅಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ನಂತರ ಮಧ್ಯಾಹ್ನ ಹೊಸಕೋಟೆಯಲ್ಲಿ ಏರ್ಪಡಿಸಿದ್ದ ಕಿರುಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಸಂಜೆ 4 ಗಂಟೆಗೆ ದೇವನಹಳ್ಳಿ, 6 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ ಗೌರಿಬಿದನೂರಿನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಷಣ, ಪಾವಗಡದಲ್ಲಿ ಮಧ್ಯಾಹ್ನ 1.30ಕ್ಕೆ ಕಿರುಸಭೆ, ತಿಪಟೂರಿನಲ್ಲಿ ಸಂಜೆ ನಡೆಯಲಿರುವ ಸಭೆಯಲ್ಲಿ ರಾಹುಲ್‍ಗಾಂಧಿ ಭಾಗವಹಿಸಲಿದ್ದಾರೆ.

ಮೇ 9ರ ಬೆಳಗ್ಗೆ 10.30ಕ್ಕೆ ಬಸವನಗುಡಿ ದೊಡ್ಡಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ಹೊಸೂರು ಮುಖ್ಯರಸ್ತೆಯಲ್ಲಿ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಜತೆ ಸಂವಾದ ನಡೆಸಲಿದ್ದಾರೆ.

ಶಿವಾಜಿನಗರದಲ್ಲಿ ಮಧ್ಯಾಹ್ನ 1.30ಕ್ಕೆ, ತಿಮ್ಮಸಂದ್ರ ಮುಖ್ಯರಸ್ತೆಯ ಬಿಇಎಂಎಲ್ ಸರ್ಕಲ್‍ನಲ್ಲಿ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದೆ. ಸಂಜೆ ಹೆಬ್ಬಾಳದಲ್ಲಿ ನಡೆಯಲಿರುವ ಸಭೆಯಲ್ಲಿ ರಾಹುಲ್‍ಗಾಂಧಿ ಪಾಲ್ಗೊಂಡು ಮಾತನಾಡಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ