ಸರ್ಕಾರ ರಚಿಸಲು ಬೇಕಾದ ಮೂರಂಕಿಯ ಸ್ಥಾನ ನಮಗೆ ಬರಲಿದೆ – ಸಚಿವ ಎಚ್.ಎಂ.ರೇವಣ್ಣ

ಚಿಕ್ಕಬಳ್ಳಾಪುರ, ಮೇ 8- ಸರ್ಕಾರ ರಚಿಸಲು ಬೇಕಾದ ಮೂರಂಕಿಯ ಸ್ಥಾನ ನಮಗೆ ಬರಲಿದೆ, ಯಾವುದೇ ಅನುಮಾನ ಬೇಡ ಎಂದು ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ನಡೆಸಿದ ಅವರು, ಈ ಬಾರಿಯೂ ಇವರಿಗೆ ಬೆಂಬಲ ನೀಡುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಪಕ್ಷಾತೀತ ನಾಯಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ಅವರು ಅಧಿಕಾರ ಸ್ವೀಕರಿಸಿದಾಗ ಹೇಳಿದಂತೆ ನುಡಿದಂತೆ ನಡೆದಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದ್ದಾರೆ. ಹಾಗಾಗಿ ಈ ಬಾರಿಯೂ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ದೊರೆಯಲಿದೆ ಎಂದು ಅವರು ಹೇಳಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ಪ್ರತಿಕ್ರಿಯೆ ಬಂದಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಕೆಲವೇ ದಿನಗಳಲ್ಲಿ ಬರುವ ಫಲಿತಾಂಶ ಕಾದು ನೋಡಿ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪ್ರಚಾರದ ವೇಳೆ ಕೋಲಾರ ಜಿಪಂ ಮಾಜಿ ಅಧ್ಯಕ್ಷ ಗಂಗೆರೆ ಕಾಲುವೆ ನಾರಾಯಣಸ್ವಾಮಿ, ಶಾಸಕ, ಅಭ್ಯರ್ಥಿ ಡಾ.ಕೆ.ಸುಧಾಕರ್, ಕುರುಬ ಸಮುದಾಯದ ಮುಖಂಡರಾದ ಶ್ರೀನಿವಾಸ್, ನರೇಂದ್ರ ಕುಮಾರ್, ಬಾಬು, ಕೃಷ್ಣಮೂರ್ತಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ