ಮತದಾರರ ಗುರುತಿನ ಚೀಟಿ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ

ಬೆಂಗಳೂರು, ಮೇ 11- ಮತದಾರರ ಗುರುತಿನ ಚೀಟಿ ಸಂಗ್ರಹ ಪ್ರಕರಣದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆಯೇ ಅಥವಾ ಮುಂದೂಡಲಾಗುತ್ತದೆಯೇ ಎಂಬ ಗೊಂದಲಕ್ಕೆ ಸಂಜೆ ವೇಳೆಗೆ ತೆರೆ ಬೀಳುವ ಸಾಧ್ಯತೆಗಳಿವೆ.
ಕೇಂದ್ರ ಚುನಾವಣಾ ಆಯೋಗ ಸಂಜೆ ವೇಳೆಗೆ ತನ್ನ ತೀರ್ಮಾನವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮತದಾರರ ಗುರುತಿನ ಚೀಟಿ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು. ನಂತರ ಆಯೋಗದ ಉಪ ಆಯುಕ್ತರೊಬ್ಬರು ಬೆಂಗಳೂರಿಗೆ ಆಗಮಿಸಿ ಪೆÇಲೀಸ್ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೊಂದಿಗೆ ಸಭೆÉ ನಡೆಸಿ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ವರದಿ ನೀಡಿದ್ದಾರೆ.

ಈ ನಡುವೆ ರಾಜಕೀಯ ಪಕ್ಷಗಳು ಚುನಾವಣೆ ಮುಂದೂಡುವಂತೆ ಆಯೋಗವನ್ನು ಒತ್ತಾಯಿಸಿದ್ದವು. ಈ ಎಲ್ಲಾ ಸಂಗತಿಗಳನ್ನು ಪರಿಶೀಲನೆ ನಡೆಸುತ್ತಿರುವ ಆಯೋಗ ಸಂಜೆಯಷ್ಟರಲ್ಲಿ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಒಂದು ವೇಳೆ ಯಾವುದೇ ನಿರ್ಧಾರ ಆಯೋಗದಿಂದ ಬಾರದಿದ್ದಲ್ಲಿ ಪೂರ್ವನಿಗದಿಯಂತೆ ನಾಳೆ ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ