ನೂತನ ನಾಯಕನಾರು ?

ಬೆಂಗಳೂರು, ಮೇ16-ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಲು ಪೈಪೆÇೀಟಿ ನಡೆಯುತ್ತಿದೆ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಕೂಡ ಸರ್ಕಾರ ರಚನೆ ಮಾಡಲು ಮುಂದಾಗಿದೆ.

ಈ ನಡುವೆ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಸರ್ಕಾರ ರಚನೆ ಮಾಡಲು ಉಭಯ ಪಕ್ಷಗಳು ಈಗಾಗಲೇ ನಿರ್ಧರಿಸಿವೆ. ಸರ್ಕಾರ ರಚನೆಯ ಚೆಂಡು ಈಗ ರಾಜ್ಯಪಾಲರ ಅಂಗಳದಲ್ಲಿದ್ದು , ಅವರು ಕೈಗೊಳ್ಳುವ ನಿರ್ಧಾರದ ಮೇಲೆ ಅದು ಅವಲಂಬಿಸಿದೆ.

ಬಿಜೆಪಿ ಅಥವಾ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದಲ್ಲಿ ಯಾರಿಗೆ ಸರ್ಕಾರ ರಚನೆ ಮಾಡಲು ರಾಜ್ಯಪಾಲರು ಆಹ್ವಾನ ನೀಡುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಮೂರು ಪಕ್ಷಗಳು ಇಂದು ಬೆಳಗ್ಗೆ ತಮ್ಮ ತಮ್ಮ ಪಕ್ಷದ ಶಾಸಕಾಂಗ ಪಕ್ಷಗಳ ಸಭೆ ನಡೆಸಿ ತಮ್ಮ ತಮ್ಮ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಂಡಿವೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್‍ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಶಾಸಕಾಂಗ ಪಕ್ಷಗಳ ಸಭೆಯ ನಂತರ ಸರ್ಕಾರ ರಚನೆ ಮಾಡಲು ರಾಜಭವನಕ್ಕೆ ತೆರಳಿ ಮೂರು ಪಕ್ಷಗಳ ನಾಯಕರು ಮನವಿ ಮಾಡಿದ್ದಾರೆ. ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ರಚನೆ ಹಕ್ಕು ಮಂಡಿಸಿದರೆ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಸರ್ಕಾರ ರಚನೆಗೆ ಎಚ್.ಡಿ.ಕುಮಾರಸ್ವಾಮಿ ಹಕ್ಕು ಮಂಡಿಸಿದ್ದಾರೆ.

ಉಭಯ ನಾಯಕರ ಸರ್ಕಾರ ರಚನೆಯ ಚೆಂಡು ಈಗ ರಾಜ್ಯಪಾಲರ ಅಂಗಳದಲ್ಲಿದೆ. ರಾಜ್ಯಪಾಲರು ಕೈಗೊಳ್ಳುವ ನಿರ್ಧಾರದ ಮೇಲೆ ರಾಜ್ಯದಲ್ಲಿ ಯಾವ ಸರ್ಕಾರ ರಚನೆಯಾಗಲಿದೆ ಎಂಬುದು ನಿರ್ಧಾರವಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ