ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ – ಶ್ರೀರಾಮುಲು

ಬಳ್ಳಾರಿ, ಮೇ 20-ಜೆಡಿಎಸ್‍ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿರುವ ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಹಲವಾರು ಭ್ರಷ್ಟಾಚಾರಗಳಾಗಿವೆ. ತಮ್ಮ ತಪ್ಪನ್ನು ಮರೆಮಾಚಿಕೊಳ್ಳಲು ಕಾಂಗ್ರೆಸಿಗರು ಜೆಡಿಎಸ್‍ನೊಂದಿಗೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಕಾಂಗ್ರೆಸಿಗರು ಮಾಡಿರುವ ಭ್ರಷ್ಟಾಚಾರಗಳನ್ನು ಸಾರ್ವಜನಿಕರ ಮುಂದೆ ಬಯಲು ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂದರು.
ಜೆಡಿಎಸ್-ಕಾಂಗ್ರೆಸ್ ಸರ್ಕಾರ ತುಂಬ ದಿನ ಅಸ್ತಿತ್ವದಲ್ಲಿರುವುದಿಲ್ಲ. ಈಗಾಗಲೇ ಎರಡೂ ಪಕ್ಷಗಳ ನಡುವೆ ಸಚಿವ ಸಂಪುಟ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ಶ್ರೀರಾಮುಲು ಹೇಳಿದರು.
104 ಸ್ಥಾನ ಗಳಿಸಿರುವ ಬಿಜೆಪಿಗೆ ಸರ್ಕಾರ ರಚಿಸಲು ಮತದಾರ ಮಹಾಪ್ರಭುಗಳು ಆಶೀರ್ವದಿಸಿದ್ದಾರೆ. ಆದರೂ ಕಾಂಗ್ರೆಸಿಗರ ಕುತಂತ್ರದಿಂದ ಬಿಜೆಪಿ ಸರ್ಕಾರ ರಚಿಸುವುದು ತಪ್ಪಿದೆ. ಅವರಿಗೆ ಮತದಾರರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ರಾಮುಲು ಎಚ್ಚರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ