ಸರ್ಕಾರ ರಚನೆ, ಸಂಪುಟ ರಚನೆ ಕುರಿತು ತೀರ್ಮಾನ ಕೈಗೊಳ್ಳಲು ಕೆ.ಸಿ ವೇಣುಗೋಪಾಲ್​ ಅವರಿಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಮೇ-21: ಸರ್ಕಾರ ರಚನೆ, ಸಂಪುಟ ರಚನೆ ಕುರಿತು ತೀರ್ಮಾನ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಸೂಚಿಸಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಹೆಚ್ ಡಿ ಕುಮಾರಸ್ವಾಮಿ ಕೆಲಹೊತ್ತು ಚರ್ಚೆ ನಡೆಸಿದರು. ಪ್ರಮಾಣ ವಚನ ಸಮಾರಂಭ ಬರುವಂತೆ ಅಹ್ವಾನ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ. ವೇಣುಗೋಪಾಲ್ ಗೆ ಸರ್ಕಾರ ರಚನೆ ಸಂಬಂಧ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಅಂತಿಮಗೊಳಿಸಲು ಅನುಮತಿ ನೀಡಿದ್ದಾರೆ. ಅಲ್ಲದೇ ಪ್ರಮಾಣ ವಚನ ಸಮಾರಂಭದ ನಂತರ ಸ್ಥಳೀಯ ನಾಯಕರೆಲ್ಲ ಕುಳಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನ್ನ ಪ್ರಮಾಣ ವಚನ ಸ್ವೀಕಾರ ಸಾಮರಂಭಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ