ನೂತನ ಡಿಸಿಎಂಗೆ ವಿಶ್ ಮಾಡಿ ಕುತೂಹಲ ಮೂಡಿಸಿದ್ರು ಪ್ರತಾಪ್ ಸಿಂಹ!

ಮೈಸೂರು,ಮೇ 23

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೆಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೂತನ ಡಿಸಿಎಂ ಗೆ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿರುವ ಜಿ ಪರಮೇಶ್ವರ್ ಅವರಿಗೆ ಶುಭಾಶಯಗಳು. ಅಲ್ಲದೆ ಡಿಸಿಎಂ ಆಗಲು ಪರಮೇಶ್ವರ್ ಅವರೇ ಸರಿಯಾದ ವ್ಯಕ್ತಿ ಅಂತ ಹೇಳಿದ್ದಾರೆ. ಒಟ್ಟಿನಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪರಮೇಶ್ವರ್ ಅವರಿಗೆ ಪ್ರತಾಪ್ ಸಿಂಹ ಶುಭಾಶಯ ಕೋರಿರುವುದು ಇದೀಗ ಅಚ್ಚರಿ ಮೂಡಿಸಿದೆ.

ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಭಾರೀ ಹೈಡ್ರಾಮಾವೇ ನಡೆದುಹೋಗಿದ್ದು, ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀರಿಸುವ ಮೂಲಕ ಫುಲ್ ಸ್ಟಾಪ್ ಬಿದ್ದಿದೆ.

ರಾಜ್ಯ ವಿಧಾನಸಭಾ ಫಲಿತಾಂಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ರೂ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ವಿಫಲವಾಯಿತು. ಆದರೂ ನಾನೇ ಸಿಎಂ ಎಂದು ಹೇಳಿಕೊಂಡು ಬಂದಿದ್ದ ಯಡಿಯೂರಪ್ಪ ಅವರು ರಾಜ್ಯಪಾಲರ ಅನುಮತಿ ಪಡೆದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಮಧ್ಯೆ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಹೀಗಾಗಿ ಎರಡು ಪಕ್ಷಗಳ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿಯವರು ತಮ್ಮ ತೆಕ್ಕೆಗೆ ಎಳೆದುಕೊಳ್ಳಲು ಪ್ರಯತ್ನಿಸಿದ್ದರು. ಹೀಗಾಗಿ ಭಾರೀ ಹೈಡ್ರಾಮಾವೇ ನಡೆದಿತ್ತು. ಆದರೆ ಸಂಜೆ ನಡೆದ ವಿಧಾನಸಭಾ ಕಲಾಪದಲ್ಲಿ ಯಡಿಯೂರಪ್ಪ ಅವರು ಭಾವನಾತ್ಮಕ ಭಾಷಣ ಮಾಡಿ ಬಳಿಕ ನೇರವಾಗಿ ರಾಜ್ಯಪಾಲರ ಬಳಿ ತೆರಳಿ ತನ್ನ ರಾಜೀನಾಮೆ ಪತ್ರವನ್ನು ನೀಡಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ