ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿಯಾದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಚರ್ಚೆ

ಬೆಂಗಳೂರು:ಜೂ-1; ಇನ್ಫೋಸಿಸ್ ನ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಇಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾರಾಯಣಮೂರ್ತಿ ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಸದ್ಯದಲ್ಲೇ ತಮ್ಮ ಸಲಹೆಗಳನ್ನು ನೀಡುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಹಾಗೂ ಇನ್ನಿತರ ಮಹತ್ವದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮಾರ್ಗದರ್ಶನ ನೀಡುವಂತೆ ನಾರಾಯಣ ಮೂರ್ತಿಯವರನ್ನು ಕೋರಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ರಚಿಸಲಾಗುವ ಈ ಸಮಿತಿ ಎರಡು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸುತ್ತದೆ

ಈ ಸಮಿತಿಯ ಭಾಗವಾಗಿರಲು ನನಗೆ ಹೆಮ್ಮೆ ಇದೆ ಎಂದ ನಾರಾಯಣ ಮೂರ್ತಿ ಅವರು ಇನ್ನು ಎರಡು ತಿಂಗಳಲ್ಲಿ ತಮ್ಮ ಸಲಹೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಆಶ್ವಾಸನೆ ನೀಡಿದರು.

ನೀವು ಅಧಿಕಾರದಲ್ಲಿರುವಾಗಲೂ, ಇಲ್ಲದಿರುವಾಗಲೂ ನಿಮ್ಮ ಚಟುವಟಿಕೆಗಳನ್ನು ನಾನು ಹತ್ತಿರದಿಂದ ಗಮನಿಸುತ್ತಿದ್ದೇನೆ. ನೀವು ರಾಜ್ಯದ ಜನತೆಗೆ, ಕೃಷಿಕರಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯವಾಗಿದೆ. ಇಸ್ರೇಲ್ ಗೆ ಭೇಟಿ ನೀಡಿ ಕೃಷಿ ಪದ್ದತಿಯ ಅಧ್ಯಯನ ನಡೆಸಿದ್ದರ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ