ಭಿನ್ನಮತ ಬಗೆಹರಿಸಲು ಕಾಂಗ್ರೆಸ್ ನಾಯಕರು ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ

 

ಬೆಂಗಳೂರು, ಜೂ.1-ಸಚಿವ ಸಂಪುಟ ವಿಸ್ತರಣೆ ನಂತರ ಉಂಟಾದ ಭಿನ್ನಮತ ಬಗೆಹರಿಸಲು ಕಾಂಗ್ರೆಸ್ ನಾಯಕರು ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನಲ್ಲಿ ಸಚಿವಾಕಾಂಕ್ಷಿಗಳು ಹೆಚ್ಚಾಗಿದ್ದು, ಎಲ್ಲರಿಗೂ ಸಚಿವ ಸ್ಥಾನ ಒದಗಿಸುವುದು ಕಷ್ಟಸಾಧ್ಯವಾಗಿದೆ. ಮೈತ್ರಿ ಒಪ್ಪಂದದಂತೆ 20 ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಬಹುದಾಗಿದೆ. ಇನ್ನುಳಿದ ಬಹುತೇಕರು ಅಸಮಾಧಾನಗೊಳ್ಳುವ ಹಿನ್ನೆಲೆಯಲ್ಲಿ ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್-ಜೆಡಿಎಸ್‍ನ ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಮೂರ್ನಾಲ್ಕು ಸ್ಥಾನಗಳನ್ನು ಹೊರತುಪಡಿಸಿ ಬಹುತೇಕ ಸ್ಥಾನಗಳು ಅಂತಿಮಗೊಂಡಿವೆ,
ಅಸಮಾಧಾನವಾಗಬಾರದು. ಮೈತ್ರಿ ಆಡಳಿತಕ್ಕೆ ಭಂಗ ತರಬಾರದು ಎಂಬ ಹಿನ್ನೆಲೆಯಲ್ಲಿ ಹೊಸ ಶಾಸಕರು ಮತ್ತು ಸಂಪುಟ ವಂಚಿತರಿಗೆ ಹಲವು ನಿಗಮ-ಮಂಡಳಿಗಳಲ್ಲಿ ಸ್ಥಾನ ಕಲ್ಪಿಸಿ ಸಮಾಧಾನಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದ್ದು, ಇದರ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊರಿಸಿದ್ದಾರೆ ಎನ್ನಲಾಗಿದೆ.

78 ಶಾಸಕರ ಪೈಕಿ 20 ಶಾಸಕರಿಗೆ ಸಚಿವ ಸ್ಥಾನ ಲಭಿಸಿದರೆ ಇನ್ನುಳಿದ ಬಹುತೇಕ ಹಿರಿಯರು ಹಾಗೂ ಜಾತಿ ಆಧಾರಿತ, ಪ್ರಾದೇಶಿಕ ಆಧಾರಿತ ಸಾಮಾಜಿಕ ನ್ಯಾಯದಡಿ ಹಲವರು ವಂಚಿತರಾಗುತ್ತಾರೆ. ಅಲ್ಲದೆ, ಬಿಜೆಪಿ ಪಕ್ಷ ಪರಿಸ್ಥಿತಿಯ ಲಾಭ ಪಡೆಯಲು ಕಾಯುತ್ತಿದೆ. ಹೀಗಾಗದಂತೆ ತಡೆಯಲು ಪ್ರಮುಖ ನಿಗಮ-ಮಂಡಳಿಗಳನ್ನು ಆಕಾಂಕ್ಷಿಗಳಿಗೆ ಕೊಡಲು ನಿರ್ಧರಿಸಲಾಗಿದೆ.

ಈಗಾಗಲೇ ಹಾಲಿ ಇದ್ದ ನಿಗಮ-ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರಿಂದ ರಾಜೀನಾಮೆ ಪಡೆಯಲಾಗಿದೆ. ಸುಮಾರು 90ಕ್ಕೂ ಹೆಚ್ಚು ವಿವಿಧ ನಿಗಮ-ಮಂಡಳಿಗಳ ಹುದ್ದೆ ಖಾಲಿಯಾಗಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರು ಹಾಗೂ ಪಕ್ಷದಲ್ಲಿ ಸೇವೆ ಸಲ್ಲಿಸಿರುವವರಿಗೆ ಶೇ.50:50ರ ಅನುಪಾತದಲ್ಲಿ ಕೊಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆಯಾಗಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ನಂತರ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ. ಈ ಮೂಲಕ ಮೈತ್ರಿ ಸರ್ಕಾರದ ಭಿನ್ನಮತವನ್ನು ಬಗೆಹರಿಸಲು ಹೊಸ ಸೂತ್ರ ಹೆಣೆಯಲಾಗಿದೆ. ನಿನ್ನೆ ತಡರಾತ್ರಿವರೆಗೆ ನಡೆದ ಸಭೆಯಲ್ಲಿ ಈ ಸಂಬಂಧ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ರೀತಿಯಾದರೆ ಎಲ್ಲ ಜನಪ್ರತಿನಿಧಿಗಳಿಗೂ, ಪಕ್ಷದ ಪ್ರಮುಖ ಕಾರ್ಯಕರ್ತರಿಗೂ ಒಂದಲ್ಲ ಒಂದು ಅಧಿಕಾರಯುತ ಹುದ್ದೆ ಲಭ್ಯವಾಗುವ ಸಾಧ್ಯತೆ ಇದೆ. ಹೀಗಾದರೆ ಮೈತ್ರಿ ಸರ್ಕಾರ ಸುಗಮವಾಗಿ ಸಾಗಲಿದೆ ಎಂಬುದು ಪ್ರಮುಖ ನಾಯಕರ ಲೆಕ್ಕಾಚಾರವಾಗಿದೆ. ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ