ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್-ಜೆಡಿಎಸ್ ಮೈತ್ರಿ ಖಚಿತ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ:ಜೂ-8: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಪಕ್ಷಗಳ ನಡುವೆ ಮೈತ್ರಿ ಖಚಿತವಾಗಿದೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್–ಜೆಡಿಎಸ್ ಒಗ್ಗೂಡಿ ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಈ ಕುರಿತು ಇನ್ನಷ್ಟು ಚರ್ಚಿಸಲಾಗುವುದು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಮಾಜ ವಿಭಜನೆ ಕೆಲಸ ಮಾಡುತ್ತಿವೆ. ಹೀಗಾಗಿ ಜಾತ್ಯತೀತ ತತ್ವ ಎತ್ತಿ ಹಿಡಿಯಲು, ಪ್ರಜಾಪ್ರಭುತ್ವ ಉಳಿಸಲು ಮತ್ತು ಸಂವಿಧಾನ ರಕ್ಷಿಸಲು ಒಟ್ಟಿಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಯಾವುದೇ ಪಕ್ಷದಲ್ಲಾದರೂ ಸಚಿವ ಸ್ಥಾನ ಹಂಚಿಕೆ ವೇಳೆ ಅಸಮಾಧಾನ ಇದ್ದೇ ಇರುತ್ತದೆ. ಅದನ್ನು ಹೈಕಮಾಂಡ್ ಶಮನಗೊಳಿಸುತ್ತದೆ ಎಂದು ಇದೇ ವೇಳೆ ಹೇಳಿದರು.

ಪಕ್ಷಕ್ಕಾಗಿ ಅನೇಕರು ದುಡಿದಿದ್ದಾರೆ. 3–4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಮಂತ್ರಿ ಆಗಬೇಕು ಎಂದು ಬಯಸುವುದು ಸಹಜ. ಹೈಕಮಾಂಡ್ ಪ್ರತಿನಿಧಿಯಾಗಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರು ಸರಿಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಭಿನ್ನಾಭಿಪ್ರಾಯಕ್ಕೆ ಯಾರೂ ತುಪ್ಪ ಸುರಿಯುವ ಕೆಲಸ ಮಾಡಬಾರದು ಎಂದರು.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಾ. ಜಿ.ಪರಮೇಶ್ವರ ಗುಂಪುಗಾರಿಕೆ ನಡೆಯುತ್ತಿದೆ ಎಂಬುದು ಊಹಾಪೋಹ. ಅವರಿಬ್ಬರ ದಾರಿಗಳು ಬೇರೆ ಬೇರೆಯಲ್ಲ. ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಸಮ್ಮಿಶ್ರ ಸರ್ಕಾರ ರಚಿಸಲಾಗಿದ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ಈ ವಿಷಯದಲ್ಲಿ ನಾವುಗಳು ನಮ್ಮ ಅಭಿಪ್ರಾಯವನ್ನು ಬದಿಗಿಟ್ಟು, ಹೈಕಮಾಂಡ್ ಸೂತ್ರವನ್ನು ಪಾಲಿಸುತ್ತಿದ್ದೇವೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ