ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ

ಪಾಟ್ನಾ:ಜೂ-9: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮುಂದಿನ ಗುರಿ. ಈ ಹಿನ್ನಲೆಯಲ್ಲಿ ಬಿಜೆಪಿ ವಿರೋಧಿ ಮನಃಸ್ಥಿತಿಯ ಪಕ್ಷಗಳಗೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಸಿಪಿಐಎಂ ಹೇಳಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಭಾರತೀಯ ಜನತಾ ಪಕ್ಷವನ್ನು ವಿರೋಧಿಸುವ ಯಾವುದೇ ಮೈತ್ರಿಕೂಟದೊಂದಿಗೆ ನಾವು ಕೈ ಜೋಡಿಸಲು ಸಿದ್ಧ ಎಂದು ಹೇಳಿದ್ದಾರೆ. ಬಿಹಾರ ಅಥವಾ ದೇಶದ ಇನ್ನಾವುದೇ ರಾಜ್ಯದಲ್ಲೂ ಸಿಪಿಐಎಂ ಬಿಜೆಪಿ ವಿರೋಧಿ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದ್ದು, ಗೌರವಯುತ ಸ್ಥಾನ ಹಂಚಿಕೆಗೆ ನಾವು ಸಿದ್ಧ ಎಂದು ಘೋಷಿಸಿದ್ದಾರೆ.

ಈ ಹಿಂದೆ ಹೈದರಾಬಾದ್ ನಲ್ಲಿ ಕಳೆದ ಏಪ್ರಿಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದ ಸೀತಾರಾಮ್ ಯೆಚೂರಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮೊದಲ ಆದ್ಯತೆ. ಈ ಆಧ್ಯತೆಯ ಮೇರೆಗೆ ನಾವು ಕಾರ್ಯತಂತ್ರ ರೂಪಿಸಲಿದ್ದೇವೆ. ಪ್ರಮುಖವಾಗಿ ಬಿಜೆಪಿ ವಿರೋಧಿ ಮತಗಳು ಹಂಚಿಕೆಯಾಗಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ಯೆಚೂರಿ ಹೇಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ