ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದರೆ ಅದಕ್ಕೆ ಬೆಂಬಲ ನೀಡುವುದಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.18- ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರವನ್ನು ಬೆದರಿಸಿದರೆ ಅದಕ್ಕೆ ಪೆÇ್ರೀ ಕೊಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಮೂರನೆ ಮಹಡಿಯಲ್ಲಿ ಕಚೇರಿ ಪೂಜೆ ನಡೆಸಿ ಅಧಿಕೃತವಾಗಿ ಕಾರ್ಯಾರಂಭ ಮಾಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಡ್ಯಾಮ್‍ಗಳು ತುಂಬಿ ಹರಿಯುತ್ತಿವೆ. ರಾಜ್ಯದ ಆಸ್ತಿಗಳಾದ ಅಣೆಕಟ್ಟುಗಳನ್ನು ಉಳಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಬಿನಿಯಿಂದ ಮೆಟ್ಟೂರಿಗೆ 6.2 ಟಿಎಂಸಿ ನೀರಿನ ಹೊರ ಹರಿವನ್ನು ಬಿಡಲಾಗಿದೆ ಎಂದು ಹೇಳಿದರು.
ಕಬಿನಿಯಿಂದ ನೀರನ್ನು ಹೊರ ಬಿಟ್ಟಿರುವುದರಿಂದ ನಂಜನಗೂಡು ಬಳಿ ಬೆಳೆ ಹಾನಿಯಾಗಿದ್ದು, ರೈತರು ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಆತ್ಮಹತ್ಯೆಯ ಬೆದರಿಕೆಯನ್ನೂ ಹಾಕಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಳೆ ನಷ್ಟ ಮತ್ತು ಅದಕ್ಕೆ ನೀಡಬೇಕಾದ ಪರಿಹಾರದ ಬಗ್ಗೆ ಚಿಂತನೆ ನಡೆಸಲು ಸಮಯ ಇದೆ. ಸದ್ಯಕ್ಕೆ ನಮಗೀಗ ಅಣೆಕಟ್ಟು ರಕ್ಷಣೆ ಆದ್ಯತೆ ಆಗಿದೆ. ಅದಕ್ಕಾಗಿ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.

ರೈತರು ಆತ್ಮಹತ್ಯೆ ಬೆದರಿಕೆ ಹಾಕಿದರೆ ಅದನ್ನು ಪೆÇ್ರೀ ಪ್ರಕೃತಿ ವಿಕೋಪ ಯಾರ ಕೈಯಲ್ಲೂ ಇಲ್ಲ. ಅಂತಹ ಸಂದರ್ಭದಲ್ಲಿ ಕಟ್ಟಡಗಳ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದರೆ ಅದನ್ನು ಬೆಂಬಲಿಸಲು ಆಗುವುದಿಲ್ಲ. ಆತ್ಮಹತ್ಯೆ ಹೇಡಿಗಳ ಲಕ್ಷಣ. ಅದನ್ನು ನಿಯಂತ್ರಿಸಲು ಒಂದು ಕಾನೂನೇ ಇದೆ ಎಂದು ವಿವರಿಸಿದರು.

ವರುಣನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ ಹಾರಂಗಿ, ಹೇಮಾವತಿ, ಕಬಿನಿ, ಕೆ.ಆರ್.ಎಸ್‍ನಲ್ಲಿ ಮೂರು ಟಿಎಂಸಿ ನೀರಿನ ಒಳ ಹರಿವಿತ್ತು. ಈಗ 51 ಟಿಎಂಸಿ ಇದೆ. 114 ಟಿಎಂಸಿ ನೀರು ತುಂಬಿದೆ. ಕಬಿನಿಯಿಂದ ಮುಂಜಾಗ್ರತೆಯಾಗಿ ನೀರನ್ನು ಹೊರ ಹರಿಯಲು ಬಿಡಲಾಗಿದೆ ಎಂದು ತಿಳಿಸಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ವಿಷಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೆಚ್ಚು ಅಧ್ಯಯನ ನಡೆಸಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಈಗಾಗಲೇ ಕೇಂದ್ರ ಸಚಿವ ನಿತಿನ್‍ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಬಾಂಬೆಯಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಇತ್ತು. ನಾನು ಭಾಗವಹಿಸಬೇಕಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆಯ ತುರ್ತು ಕಾರ್ಯಗಳು ಮತ್ತು ಕಚೇರಿ ಪೂಜೆ ಇದ್ದುದ್ದರಿಂದ ನಾನು ಹೋಗಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಾಲ ಮನ್ನಾ ವಿಷಯವಾಗಿ ಯಡಿಯೂರಪ್ಪ ಅವರು ಹೋರಾಟ ನಡೆಸಲು ವಿಳಂಬ ಮಾಡುತ್ತಿರುವುದೇಕೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಈಗಾಗಲೇ ಅವರು ಹೋರಾಟ ಆರಂಭಿಸಿದಂತಿತ್ತು. ಸರ್ಕಾರ ಕೆಲಸ ಮಾಡಲು ಕಾಲಾವಕಾಶ ಕೊಡಬೇಕು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೊದಲ ದಿನವೇ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದರು. ಮೂರ್ನಾಲ್ಕು ದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ತಮ್ಮ ಮಾತಿನಂತೆ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಲು ಸಾಧ್ಯವಾಯಿತೆ? ಸರ್ಕಾರಕ್ಕೆ ಕೆಲವು ನೀತಿ ನಿಯಮಗಳಿರುತ್ತವೆ. ಅದರ ಆಚಾರ-ವಿಚಾರಗಳನ್ನು ತಿಳಿದು ಕೊಳ್ಳಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ತಿರುಗೇಟು ನೀಡಿದರು.

ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೇರಿದ ವಿಷಯ. ಇದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

Natural disaster,Farmers commit suicide,Water Resources Minister DK Shivakumar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ