ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿಸಲು ಚಿಂತನೆ: ಮೇಯರ್ ಸಂಪತ್ ರಾಜ್

 

ಬೆಂಗಳೂರು,ಜು.2-ನಗರದ ಹೃದಯ ಭಾಗದಲ್ಲಿರುವ ಗಾಂಧಿನಗರವನ್ನು ಮಾದರಿ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೇಯರ್ ಸಂಪತ್ ರಾಜ್ ಇಂದಿಲ್ಲಿ ತಿಳಿಸಿದ್ದಾರೆ.
ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಶಿವರಾಜ್ ಸೇರಿದಂತೆ ಅಧಿಕಾರಿಗಳೊಂದಿಗೆ ಗಾಂಧಿನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಉದ್ದಿಮೆದಾರರು, ಚಲನಚಿತ್ರರಂಗದವರು ಹೆಚ್ಚಾಗಿದ್ದಾರೆ. ಇಲ್ಲಿ ವಾಹನಗಳಿಗಿಂತ ಪಾದಚಾರಿಗಳ ಸಂಖ್ಯೆಯೇ ಹೆಚ್ಚಾಗಿದೆ. ಹಾಗಾಗಿ ಈ ಪ್ರದೇಶವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಾಲಿಕೆ ತೀರ್ಮಾನಿಸಿದೆ ಎಂದರು.
ಪದೇ ಪದೆ ರಸ್ತೆ ಅಗೆಯುವುದನ್ನು ತಪ್ಪಿಸಲು 6 ಕಡೆ ಟೆಂಡರ್‍ಶೂರ್ ಮಾದರಿಯಲ್ಲಿ ರಸ್ತೆ ನಿರ್ಮಾಣ ಮಾಡಲಾಗುವುದು. ಈ ಮಾದರಿಯಲ್ಲಿ ರಸ್ತೆ ನಿರ್ಮಾಣವಾದರೆ ಪದೇ ಪದೇ ರಸ್ತೆ ಅಗೆಯುವಂತಿಲ್ಲ. ಕೇಬಲ್ ಕಾಟವೂ ಇರುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದ ಅವರು, ಪಾದಾಚಾರಿಗಳ ಹಿತದೃಷ್ಟಿಯಿಂದ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ಭಾಗದಲ್ಲಿರುವ ಉದ್ಯಾನವನಗಳನ್ನು ಆಕರ್ಷಣೀಯವಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ.ಶೀಘ್ರವೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಇದಕ್ಕೂ ಮುನ್ನ ಶಾಸಕ ದಿನೇಶ್ ಗುಂಡೂರಾವ್ ಅವರೊಂದಿಗೆ ಮಂತ್ರಿಮಾಲ್ ಹಿಂಭಾಗದ ಸರ್ವೀಸ್ ರಸ್ತೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ರಸ್ತೆಯನ್ನು ಅಭಿವೃದ್ದಿಪಡಿಸಿದರೆ ವಾಹನಗಳ ಸಂಚಾರ ಡೈವರ್ಟ್ ಆಗುತ್ತದೆ. ಅಲ್ಲದೆ ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿ ವಾಹನ ದಟ್ಟಣೆ ತಗ್ಗಲಿದೆ ಎಂದರು.
ಶಿವಾನಂದ ವೃತ್ತದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಿಸಲಾಗುತ್ತಿದ್ದು,ಇನ್ನು 8 ತಿಂಗಳೊಳಗೆ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದರು.
ಈ ಸ್ಟೀಲ್‍ಬ್ರಿಡ್ಜ್ ಎತ್ತರವಾಗಿರುವುದರಿಂದ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಇದರ ವೇಗವನ್ನು ಹೆಚ್ಚಿಸಿ ಶೀಘ್ರ ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ