ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ

ಮುಂಬೈ, ಜು.6- ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ ಎಂದು ಹೇಳಿದ್ದಾರೆ. ಕ್ರೈಸ್ತರು ಬ್ರಿಟನ್ ಮೂಲವನ್ನು ಹೊಂದಿದ್ದಾರೆ. ಆದ್ದರಿಂದ ಅವರು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾಗಿರಲಿಲ್ಲ. ಭಾರತ ಹಿಂದೂಗಳಿಂದಾಗಲೀ ಅಥವಾ ಮುಸ್ಲಿಮರಿಂದಾಗಲಿ ಸ್ವಾತಂತ್ರ್ಯ ಪಡೆಯಲಿಲ್ಲ. ನಾವು ಹಿಂದೂಸ್ಥಾನಿಗಳಾಗಿ ಹೋರಾಟ ಮಾಡಿದ್ದಕ್ಕಾಗಿ ಸ್ವಾತಂತ್ರ್ಯ ದೊರೆಯಿತು ಎಂದು ಗೋಪಾಲ್ ಶೆಟ್ಟಿ ಹೇಳಿದ್ದಾರೆ. ಕಬ್ರಸ್ತಾನ್ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗೋಪಾಲ್ ಶೆಟ್ಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋಪಾಲ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಬಿಜೆಪಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿ ಸಂಸದನಿಗೂ ಇತಿಹಾಸ ಗೊತ್ತಿಲ್ಲ ಅಥವಾ ಕೋಮು ಸೌಹಾರ್ದತೆಯನ್ನು ಹಾಳುಮಾಡುವುದಕ್ಕೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೆ ಇದ್ದದ್ದು ಕ್ರೈಸ್ತರೋ ಅಥವಾ ಮುಸ್ಲಿಮರೋ ಅಲ್ಲ, ಬದಲಾಗಿ ಆರ್‍ಎಸ್‍ಎಸ್ ಹಾಗೂ ಹಿಂದೂ ಮಹಾಸಭಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿರಲಿಲ್ಲ. ಇದು ಬಿಜೆಪಿಯ ಇತಿಹಾಸ ಎಂದು ಕಾಂಗ್ರೆಸ್ ಟ್ವೀಟ್‍ನಲ್ಲಿ ಆಕ್ರೋಶ ಹೊರಹಾಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ