ಕಾಂಗ್ರೆಸ್‍ನಿಂದ ಪ್ರತ್ಯುತ್ತರ ನೀಡದಿರುವುದು ಸೋಲಿಗೆ ಕಾರಣ – ಸಿದ್ದರಾಮಯ್ಯ

 

ಬೆಂಗಳೂರು, ಜು.11-ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ಅಪಪ್ರಚಾರಕ್ಕೆ ಕಾಂಗ್ರೆಸ್‍ನಿಂದ ತಕ್ಕ ಪ್ರತ್ಯುತ್ತರ ನೀಡಲು ಸಾಧ್ಯವಾಗದೆ ಇರುವುದೇ ನಮ್ಮ ಸೋಲಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದರು.
ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ವರ್ಷ ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡಿತ್ತು. ಜನ ಮತ್ತೆ ನಮ್ಮನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಬಿಜೆಪಿಯ ಅಪಪ್ರಚಾರದಿಂದ ಅದು ಸಾಧ್ಯವಾಗಲಿಲ್ಲ. ಬಿಜೆಪಿಯವರು 30 ಜನ ಮತದಾರರಿಗೆ ಒಬ್ಬ ಕಾರ್ಯಕರ್ತನನ್ನು ನೇಮಿಸಿ ಕಾಂಗ್ರೆಸ್ ವಿರುದ್ಧ ಹಾಗೂ ಹಿಂದುತ್ವದ ಕುರಿತು ಮನೆಮನೆಗೆ ಹೋಗಿ ಸುಳ್ಳು ಪ್ರಚಾರಗಳನ್ನು ಮಾಡಿದರು. ಈ ಅಪಪ್ರಚಾರಕ್ಕೆ ಪ್ರತಿಯಾಗಿ ಸತ್ಯ ಹೇಳಿ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ವಿಫಲವಾಯಿತು. ಇದಕ್ಕೆ ನಾನು ಯಾರನ್ನು ಹೊಣೆ ಮಾಡುವುದಿಲ್ಲ. ನಮ್ಮ ಸೋಲಿಗೆ ಬಿಜೆಪಿಯವರ ಅಪಪ್ರಚಾರವೇ ಪ್ರಮುಖ ಕಾರಣ ಎಂದು ಹೇಳಿದರು.
ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ನಡವಳಿಕೆಗೆ ಅವಕಾಶ ನೀಡಬಾರದು. ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ಐದು ವರ್ಷ ಕಾಂಗ್ರೆಸ್ ಆಡಳಿತವನ್ನು ಜನ ಮತ್ತೆ ನೆನೆಪಿಸಿಕೊಳ್ಳುತ್ತಾರೆ. ನಮಗೆ ಅವಕಾಶ ಕೊಟ್ಟೇ ಕೊಡುತ್ತಾರೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಬೇಕು. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೂತನ ಅಧ್ಯಕ್ಷರಾದ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರಿಗೆ ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡಬೇಕು ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು, ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಿದ್ದ ನನ್ನ ಮೇಲೆ ಭಾರೀ ವಿಶ್ವಾಸವಿಟ್ಟಿದ್ದರು, ಚುನಾವಣೆ ಜವಾಬ್ದಾರಿ ನೀಡಿದ್ದರು. ಆದರೆ ನಾವು ನಿರೀಕ್ಷೆಯಷ್ಟು ಸ್ಥಾನಗಳನ್ನು ಗೆಲಲ್ಲಿಲ್ಲ. ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರಲಿಲ್ಲ. ಅನಿವಾರ್ಯವಾಗಿ ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದರು.
ಜಾತ್ಯತೀತ ಶಕ್ತಿಗಳ ಹೊಂದಾಣಿಕೆ:
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಲಿವೆ. ಬಿಜೆಪಿಯವರ ಸುಳ್ಳು ಪ್ರಚಾರಗಳು ಯಶಸ್ವಿಯಾಗುವುದಿಲ್ಲ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲಲ್ಲಿದೆ. ರಾಹುಲ್‍ಗಾಂಧಿಯವರು ಪ್ರಧಾನಿಯಾಗುವ ದಟ್ಟ ಮುನ್ಸೂಚನೆ ಇದೆ. ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ. ಚುನಾವಣೆ ವೇಳೆ ಕೊಟ್ಟ ಯಾವ ಭರವಸೆ ಈಡೇರಿಸದ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. ಭಾವನಾತ್ಮಕ ವಿಷಯಗಳ ಆಧಾರದ ಮೇಲೆ ಜನರನ್ನು ವಿಭಜಿಸುವ ಮತ್ತು ದಾರಿ ತಪ್ಪಿಸುವ ಸಂಘ ಪರಿವಾರ ಮತ್ತು ಬಿಜೆಪಿಯ ಪ್ರಯತ್ನ ವಿಫಲಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪೆಟ್ರೋಲ್-ಡೀಸಲ್ ತೆರಿಗೆ ಇಳಿಸಬೇಕು:
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್‍ನಲ್ಲಿ ಪೆಟ್ರೋಲ್-ಡೀಸಲ್ ಮೇಲೆ ಶೇ.2ರಷ್ಟು ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಇದು ಹೊರೆಯಾಗಲಿದೆ. ಹಾಗಾಗಿ ಶೇ.2ರಷ್ಟು ತೆರಿಗೆ ಹೆಚ್ಚಳ ಹಿಂಪಡೆದು ಈ ಮೊದಲಿನಂತೆ ಶೇ.32ರಲ್ಲೇ ಮುಂದುವರೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದೇನೆ. ಕೇಂದ್ರ ಸರ್ಕಾರ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ, 9 ಬಾರಿ ಇಂಧನ ಬೆಲೆ ಏರಿಕೆ ಮಾಡಿದೆ. ಇದು ಜನರಿಗೆ ಹೊರೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಅನ್ನಭಾಗ್ಯ ಯೋಜನೆಯಡಿ ನಮ್ಮ ಸರ್ಕಾರ ನೀಡುತ್ತಿದ್ದ 7 ಕೆಜಿ ಅಕ್ಕಿ ಪೈಕಿ 2 ಕೆಜಿ ಕಡಿತ ಮಾಡಿರುವುದನ್ನು ಸಿದ್ದರಾಮಯ್ಯ ವಿರೋಧಿಸಿದರು.
ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕು. ಹಾಗಾಗಿ ಮತ್ತೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಕೊಡಲು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಜೆಡಿಎಸ್ -ಕಾಂಗ್ರೆಸ್ ಸಮನ್ವಯ ಸಮಿತಿ ರಚಿಸಿಕೊಂಡು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿ ಆ ಮೂಲಕ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಎಂದು ಅವರು ಹೇಳಿದರು.
ಪರಮೇಶ್ವರ್ ಮತ್ತು ನನ್ನ ನಡುವೆ ಸದಾ ಕಾಲ ಒಳ್ಳೆಯ ಅನ್ಯೋನ್ಯತೆ ಇದ್ದು, ಅವರು ಅಧ್ಯಕ್ಷರಾದಾಗ ನಾನು ವಿರೋಧ ಪಕ್ಷದ ನಾಯಕನಾಗಿದ್ದೆ. ನಂತರ ಐದು ವರ್ಷ ಮುಖ್ಯಮಂತ್ರಿಯಾಗಿಯೂ ಒಳ್ಳೆಯ ಕೆಲಸ ಮಾಡಿದ್ದೇನೆ. ಈ ವೇಳೆಯಲ್ಲಿ ನಮ್ಮ ನಡುವೆ ಉತ್ತಮ ಹೊಂದಾಣಿಕೆ ಇತ್ತು. ಹಲವಾರು ಚುನಾವಣೆಗಳನ್ನು ಎದುರಿಸಿದ್ದೇವೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿದ್ದೇವೆ ಎಂದರು.
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜಕಾರಣದಲ್ಲಿ ಯಾರು ಬೇಕಾದರೂ ಸಚಿವರಾಗಬಹುದು. ಆದರೆ ಪಕ್ಷದ ಅಧ್ಯಕ್ಷರಾಗುವುದು ಸುಲಭದ ಮಾತಲ್ಲ. ದಿನೇಶ್‍ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಅವರಿಗೆ ಅವಕಾಶ ದಕ್ಕಿದೆ. ಅವರು ಉತ್ತಮ ಕೆಲಸ ಮಾಡಲು ಎಲ್ಲ ಸಹಕಾರ ನೀಡುತ್ತೇವೆ ಎಂದರು.
ನಾನು ಸಚಿವನಾಗಿರುವುದಕ್ಕಿಂತಲೂ ಕಾರ್ಯಕರ್ತನಾಗಿರಲು ಹೆಚ್ಚು ಇಷ್ಟ ಪಡುತ್ತೇನೆ. ಸಚಿವ ಸ್ಥಾನ ತಾತ್ಕಾಲಿಕ, ಕಾರ್ಯಕರ್ತ ಸ್ಥಾನ ಖಾಯಂ ಎಂದು ಹೇಳೀದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ಹೈಕಮಾಂಡ್ ತೀರ್ಮಾನ ಸ್ವಾಗತಿಸುತ್ತೇವೆ. ಮುಂದಿನ ದಿನಗಳಲ್ಲಿ ನೂತನ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಅಗತ್ಯ ಎಲ್ಲ ಸಹಕಾರ ನೀಡುತ್ತೇನೆ ಎಂದು ಹೇಳಿದರು.
ಮಾಜಿ ಕೇಂದ್ರ ಸಚಿವ ರೆಹಮಾನ್‍ಖಾನ್ ಮಾತನಾಡಿ, ಆರ್.ಗುಂಡೂರಾವ್ ಅವರ ಜೊತೆಯಲ್ಲೂ ಕೆಲಸ ಮಾಡಿದ್ದೆ. ಈಗ ಅವರ ಪುತ್ರ ದಿನೇಶ್‍ಗುಂಡೂರಾವ್ ಅವರ ಜೊತೆ ಕೆಲಸ ಮಾಡುವುದು ನನ್ನ ಸೌಭಾಗ್ಯ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ