ಲೋಕಸಭೆ ಚುನಾವಣೆಗೆ ಸಿದ್ಧತೆ: ಅಮಿತ್ ಶಾರಿಂದ 23 ಅಂಶಗಳ ಕಾರ್ಯತಂತ್ರ

 

ಬೆಂಗಳೂರು, ಜು.17- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು 23 ಅಂಶಗಳ ಕಾರ್ಯತಂತ್ರವನ್ನು ರೂಪಿಸಿದ್ದಾರೆ.
ಇದೇ 28ರಂದು ಬೆಂಗಳೂರಿಗೆ ಆಗಮಿಸಲಿರುವ ಶಾ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಗೆಲ್ಲಬಹುದಾದ 20 ಕ್ಷೇತ್ರಗಳಿಗೆ 23 ಅಂಶಗಳ ತಂತ್ರವನ್ನು ಹೆಣೆದಿದ್ದಾರೆ.
ಅಮಿತ್ ಶಾ ಆಗಮಿಸಿದ ಸಂದರ್ಭದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೋರ್‍ಕಮಿಟಿ ಸದಸ್ಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಬೇಕೆಂದು ಸೂಚಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಮುಖರು ಮತ್ತು ಪದಾಧಿಕಾರಿಗಳಿಗೆ 19 ಅಂಶಗಳ ಟಾಸ್ಕ್ ನೀಡಿದ್ದರು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇದನ್ನು ಪೂರ್ಣಗೊಳಿಸಿದವರಿಗೆ ಮಾತ್ರ ಟಿಕೆಟ್ ನೀಡಲಾಗುವುದೆಂದು ಸ್ಪಷ್ಟಪಡಿಸಲಾಗಿತ್ತು. ಇದರ ಪರಿಣಾಮವಾಗಿಯೇ ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಾಗದಿದ್ದರೂ 104 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.
ಈಗ ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ 23 ಗುರಿಯನ್ನಿಟ್ಟುಕೊಂಡು ಅಖಾಡಕ್ಕಿಳಿಯಲು ಬಿಜೆಪಿ ಸಜ್ಜಾಗಿದೆ. ಇದರಲ್ಲಿ ಪ್ರಮುಖವಾಗಿ 2009 ಹಾಗೂ 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಮತ್ತು ಸೋಲು ಕಂಡಿದ್ದ ಅಭ್ಯರ್ಥಿಗಳು ಕಾರ್ಯಕರ್ತರ ಜತೆ ಕಡ್ಡಾಯವಾಗಿ ಬೆರೆಯಬೇಕು. ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಅಭ್ಯರ್ಥಿಗಳು ಕ್ಷೇತ್ರ ಬಿಟ್ಟು ಕದಲಬಾರದು. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವುದು, ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿರುವುದನ್ನು ಮನವರಿಕೆ ಮಾಡುವುದು, ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ನಿರಂತರ ಹೋರಾಟ ಸೇರಿದಂತೆ ಒಟ್ಟು 23 ಗುರಿಗಳ ಮೂಲಕ ಚುನಾವಣೆಗೆ ಸಜ್ಜಾಗುವಂತೆ ಶಾ ಸೂಚಿಸಿದ್ದಾರೆ.
ಜು.28ರಂದು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಇವುಗಳ ಬಗ್ಗೆ ಅಮಿತ್ ಶಾ ಮನವರಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ