ವೈದ್ಯರ ಮುಷ್ಕರ ರೋಗಿಗಳ ಪರದಾಟ

ಹುಬ್ಬಳ್ಳಿ- ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹೊರರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಬರುವ ರೋಗಿಗಳು ಪರದಾಡುತ್ತಿದ್ದಾರೆ. ದೂರದ ಊರುಗಳಿಂದ ಬರುತ್ತಿರುವ ರೋಗಿಗಳು ಪರದಾಡುತ್ತಿದ್ದು, ಕಿಮ್ಸ್ ಗೆ ತೆರಳುತ್ತಿದ್ದಾರೆ. ಹುಬ್ಬಳ್ಳಿಯ 350 ಕ್ಲಿನಿಕ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 100 ಕ್ಕೂ ಹೆಚ್ಚು ನರ್ಸಿಂಗ್ ಹೋಂ ಗಳ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಿದ್ದು ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್‌ ಹೋಮ್‌ಗಳಲ್ಲಿ ಇಂದು ಹೊರ ರೋಗಿ ವಿಭಾಗದ (ಒಪಿಡಿ) ಸೇವೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆ ಕಿಮ್ಸ್ ನಲ್ಲಿ ಬೆಳಗಿನಿಂದ ಸಂಜೆ ವರೆಗೆ ವೈದ್ಯಕೀಯ ಸೇವೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿ ಐಎಂಎ ಸಂಘದ ಕಚೇರಿ ಲೋಕಪ್ಪನ ಹಕ್ಕಲದಿಂದ ಹುಬ್ಬಳ್ಳಿ ತಹಶೀಲ್ದಾರ ಕಚೇರಿ ವರೆಗೆ ಖಾಸಗಿ ಆಸ್ಪತ್ರೆ ವೈದ್ಯರು ಮೌನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ ಎಂದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ‌ ಪ್ರತಿಭಟನಾಕಾರರು, ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ