ಮೈಸೂರು, ಆ.8- ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಒಂದು ತಿಂಗಳ ಮೊದಲೇ ಹೆಚ್ಚು ಜನರನ್ನು ಸೆಳೆಯಲು ಹಬ್ಬದ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆ.23 ಅಥವಾ 24ರಂದು ಗಜ ಪಯಣಕ್ಕೆ ಮುಹೂರ್ತ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ದಸರಾಕ್ಕೂ ಮುನ್ನವೆ ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮತ್ತಿತರ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.
ಈ ಬಾರಿ ಏರ್ ಶೋನಲ್ಲಿ ಮಿಲಿಟರಿ ಹಾಗೂ ವಾಯುದಳದ ಹೆಚ್ಚು ವಿಮಾನಗಳ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟದ ಸಭೆ ಶೀಘ್ರದಲ್ಲೇ ನಡೆಯಲಿದೆ. ಇದಕ್ಕೆ ಪೂರಕವಾಗಿ ಯಾವ ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ದಸರಾ ಉಪಸಮಿತಿ ರಚನೆ, ಕಾರ್ಯಕ್ರಮದ ಆಯೋಜನೆ ಬಗ್ಗೆ ಉನ್ನತ ಮಟ್ಟದ ಸಭೆಯ ನಂತರ ನಿರ್ಧರಿಸಲಾಗುವುದು.