ಅರ್ಕಾವತಿ ಡಿ ನೋಟೀಫಿಕೇಷನ್ ಎಚ್.ಡಿ.ಕೆ ಬಿಗ್ ರಿಲೀಫ್

ಬೆಂಗಳೂರು: -ಅರ್ಕಾವತಿ ಡಿ ನೋಟೀಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಅರ್ಕಾವತಿ ಡಿ ನೋಟೀಫಿಕೇಷನ್ ಪ್ರಕರಣದಿಂದ ಕೈ ಬಿಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಅವರು ಸಿಎಂ ಸೇರಿ ಮೂವರನ್ನು ತನಿಖೆಯಿಂದ ಕೈ ಬಿಟ್ಟು ಆದೇಶ ನೀಡಿದ್ದಾರೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶ್ರೀರಾಮ್, ಜ್ಯೋತಿರಾಮಲಿಂಗಂ ಅವರನ್ನು ಮುಕ್ತಗೊಳಿಸಿದೆ. ಮತ್ತೊಬ್ಬ ಆರೋಪಿಯಾಗಿದ್ದ ಚನ್ನಿಗಪ್ಪ ಯಾವುದೇ ಅರ್ಜಿ ಸಲ್ಲಿಸದ ಕಾರಣ ಅವರ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಅರ್ಕಾವತಿ ಲೇಔಟ್ ಡಿ ನೋಟೀಫಿಕೇಷನ್ ಪ್ರಕರಣ ಸಂಬಂಧ ನ್ಯಾಯಾಲಯದ ತೀರ್ಪು ವ್ಯತಿರಿಕ್ತವಾಗಿದ್ದರೇ ಕುಮಾರಸ್ವಾಮಿ ಅವರಿಗೆ ಕಂಟಕವಾಗುವ ಸಾಧ್ಯತೆ ಇತ್ತು. ಈಗ ಅವರನ್ನು ಆರೋಪ ಮುಕ್ತಗೊಳಿಸಿರುವುದು ನಿರಾಳವಾದಂತಾಗಿದೆ.
ಅರ್ಕಾವತಿ ಡಿ ನೋಟೀಫಿಕೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅರ್ಕಾವತಿಯಲ್ಲಿ ಡಿ ನೋಟಿಫಿಕೇಷನ್ ಮಾಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆರೋಪಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಪ್ರತಿಪಕ್ಷ ಬಿಜೆಪಿಯೂ ಕೂಡ ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಕುಮಾರಸ್ವಾಮಿಯವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಡಿ ನೋಟೀಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ನಾಲ್ಕು ವರ್ಷಗಳ ನಂತರ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ. ಇದು ರಾಜಕೀಯ ಪ್ರೇರಿತವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಯಾವುದೇ ಜನಪ್ರತಿನಿಧಿಗಳು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವಾಗ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಆದರೇ, ಈ ಯಾವುದೇ ನಿಯಮಗಳನ್ನು ಪಾಲಿಸದೆ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಹಾಗಾಗಿ ಈ ಪ್ರಕರಣ ವಿಚಾರಣೆಗೆ ಪೂರಕವಾಗಿಲ್ಲ ಎಂದು ಅಭಿಪ್ರಾಯಪಟ್ಟಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಅವರು ಈ ನಾಲ್ವರನ್ನು ಖುಲಾಸೆಗೊಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ