4 ಸಾವಿರ ರೂ. ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಬೆಂಗಳೂರು, ಆ.30- ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಮಂಜೂರಾದ ಹಣ ಬಿಡುಗಡೆಗಾಗಿ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ 4 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಹಗರಿ ಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡಾದ ನಿವಾಸಿಯೊಬ್ಬರು ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಹಣ ಬಿಡುಗಡೆಗಾಗಿ ಕೋರಿ ಅರ್ಜಿ ಸಲ್ಲಿಸಿದ್ದರು.
ಹಂಪಾ ಪಟ್ಟಣದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರೇಶ್ ಎಂಬುವವರು ಮೇಲಧಿಕಾರಿಯಿಂದ ಅನುಮೋದನೆ ಪಡೆದು ಹಣ ಮಂಜೂರು ಮಾಡಲು 4 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನಿನ್ನೆ ಅರ್ಜಿದಾರರಿಂದ ವೀರೇಶ್ ಅವರು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಇವರಿಂದ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ