ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ – ಅರುಣ್ ಜೇಟ್ಲಿ

ನವದೆಹಲಿ,ಆ.31- ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ. ಇದರಿಂದ ದೇಶದ ಆರ್ಥಿಕತೆ ಸುಭದ್ರವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ನಿಷೇಧ ಕುರಿತು, ನಿಷೇಧಗೊಂಡಿದ್ದ ಬಹುತೇಕ ಎಲ್ಲಾ 500 ಮತ್ತು ಸಾವಿರ ಮುಖಬೆಲೆಯ ನೋಟುಗಳು ಬ್ಯಾಂಕ್‍ಗೆ ಜಮೆಯಾಗಿದೆ ಎಂದು ವರದಿ ನೀಡಿತ್ತು. ಈ ವರದಿ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ನೋಟು ನಿಷೇಧ ಕ್ರಮಕ್ಕೆ ಸಾಕಷ್ಟು ಚರ್ಚೆಗಳು ನಡೆದು ಸರ್ಕಾರ ವಿವಾದಕ್ಕೀಡಾಗಿತ್ತು. ಆದರೆ ಸರ್ಕಾರದ ಈ ಕ್ರಮದಿಂದಾಗಿ ಇಂದು ದೇಶದ ಆರ್ಥಿಕತೆ ಸುಗಮವಾಗಿದೆಯಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ ಎಂದು ಹೇಳಿದ್ದಾರೆ.
ನೋಟು ಅಮಾನ್ಯೀಕರಣದ ಮೊದಲು 2 ವರ್ಷಗಳಲ್ಲಿ ತೆರಿಗೆ ಸಂಗ್ರಹ ಕೇವಲ ಶೇ. 6.6 ರಿಂದ ಶೇ. 9 ರಷ್ಟಿತ್ತು. ನೋಟು ನಿಷೇಧದ ಬಳಿಕ ಇದರ ಪ್ರಮಾಣ ಶೇ. 15 ರಿಂದ ಶೇ. 18 ಕ್ಕೆ ಗಣನೀಯವಾಗಿ ಏರಿಕೆಯಾಗಿದೆ. ಸರ್ಕಾರದ ಈ ಕ್ರಮದಿಂದ ಇಂದು ದೇಶದ ಆರ್ಥಿಕತೆ ಸುಗಮವಾಗಿ ನಡೆಯಲು ಸಹಾಯಕವಾಗಿದೆ ಎಂದಿದ್ದಾರೆ.
ತೆರಿಗೆ ಸಂಗ್ರಹವನ್ನೇ ಕೇಂದ್ರವಾಗಿಟ್ಟುಕೊಂಡು ನೋಟು ನಿಷೇಧ ಮಾಡಲಾಗಿತ್ತು. ಅಲ್ಲದೆ ಕಪ್ಪುಹಣ ಹೊರಗೆಳೆಯುವುದು ಇದರ ಪ್ರಮುಖ ಉದ್ದೇಶವಾಗಿತ್ತು. ಇದರಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಸ್ವಿಸ್ ಬ್ಯಾಂಕ್ ನಲ್ಲಿದ್ದ ಭಾರತೀಯರ ಠೇವಣಿ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ