ಸೆ.6 ರಂದು ದಿ ವ್ಹೀಲ್ ಆಫ್ ಜಸ್ಟೀಸ್ ಕೃತಿ ಬಿಡುಗಡೆ

ಬೆಂಗಳೂರು, ಸೆ.4-ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಅವರು ರಚಿಸಿರುವ ದಿ ವ್ಹೀಲ್ ಆಫ್ ಜಸ್ಟೀಸ್ ಎಂಬ ಕೃತಿಯನ್ನು ಸೆ.6 ರಂದು ಹೈಕೋರ್ಟ್ ಆವರಣದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಗಂಗಾಧರಯ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ರಾಮಾಯಣ ಮಹಾನ್ವೇಷಣಮ್, ಸಿರಿಮುಡೀ ಪರಿಕಾರಮಾ ಹಾಗೂ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ನಂತಹ ಪವಿತ್ರ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಂದು ಯುವ ವಕೀಲರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು. ಇದೇ ಹಿನ್ನೆಲೆಯಲ್ಲಿ ಅವರು ಒಬ್ಬ ಸಮರ್ಥ ಶಾಸಕ, ಸಚಿವ, ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೇಂದ್ರ ಕಾನೂನು ಮತ್ತು ನ್ಯಾಯ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಸದರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಒಬ್ಬ ಕಾನೂನು ತಜ್ಞರಾಗಿ ಮೊಯ್ಲಿ ಅವರು ಈ ಕೃತಿಯನ್ನು ರಚಿಸಿದ್ದು, ಈ ಕೃತಿಯ ಮೂಲಕ ಕಾನೂನಿನ ಮೂಲ, ಕಾನೂನಿನ ಅಭಿವೃದ್ಧಿ, ಕಾನೂನಿನ ಭಾತೃತ್ವಕ್ಕೆ ಸಂಬಂಧಿಸಿದ ವಿಚಾರ ಸೇರಿದಂತೆ ಹಲವಾರು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ.
ಭಾರತದ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಡಾ.ಎಂ.ಎನ್.ವೆಂಕಟಾಚಲಯ್ಯ ಅವರ ನಾಯಕತ್ವದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಡಾ.ಎನ್.ಕುಮಾರ್, ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲ ಡಾ.ಬಿ.ವಿ.ಆಚಾರ್ಯ, ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ, ಭಾರತೀಯ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ.ಆರ್.ವೆಂಕಟರಾವ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ