ಬೀದಿನಾಯಿಗಳ ಹಾವಳಿ ತಪ್ಪಿಸಲು ಅಸಾಧ್ಯವೆಂದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಸೆ.6- ನಗರದಲ್ಲಿ ಹೆಚ್ಚಾಗಿರುವ ಬೀದಿನಾಯಿ ಹಾವಳಿ ತಪ್ಪಿಸಲು ಅಸಾಧ್ಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮತ್ತು ಕೇಂದ್ರ ಸರ್ಕಾರ ಬೀದಿ ನಾಯಿಗಳನ್ನು ಸಾಯಿಸಬಾರದು ಹಾಗೂ ದೂರದ ನಿರ್ಜನ ಪ್ರದೇಶಗಳಿಗೂ ಬಿಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿವೆ. ಹಾಗಾಗಿ ನಾವು ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕಳೆದ ವರ್ಷ ಬೀದಿ ನಾಯಿಗಳನ್ನು ಬೇರೆಡೆ ಕೊಂಡು ಹೋಗಿ ಸುಟ್ಟು ಹಾಕಿದ್ದೆವು. ಬೀದಿ ನಾಯಿಗಳನ್ನು ಹಿಡಿಯಬೇಕು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಬೇಕು, ರೇಬಿಸ್ ಬರದಂತೆ ಅವುಗಳಿಗೆ ಚುಚ್ಚುಮದ್ದು ಕೊಡಿಸುವುದು ನಮ್ಮ ಕೆಲಸ. ಅದನ್ನು ಪ್ರತಿ ವರ್ಷವೂ ಕಟ್ಟುನಿಟ್ಟಾಗಿ ಮಾಡುತ್ತಿದ್ದೇವೆ. ಅದು ಬಿಟ್ಟು ನಾಯಿಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ನಿರ್ದಾಕ್ಷಿಣ್ಯವಾಗಿ ರಾಜಕಾಲುವೆ ಒತ್ತುವರಿ ತೆರವು: ನಗರದಲ್ಲಿ ರಾಜಕಾಲುವೆಯಿಂದಾಗುವ ಅನಾಹುತವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಮತ್ತು ರಾಜಕಾಲುವೆ ಒತ್ತುವರಿ ತೆರವನ್ನು ನಿರ್ದಾಕ್ಷಿಣ್ಯವಾಗಿ ಮಾಡಲಾಗುವುದು ಎಂದು ಇದೇ ವೇಳೆ ಮಂಜುನಾಥ ಪ್ರಸಾದ್ ತಿಳಿಸಿದರು.
ರಾಜಕಾಲುವೆ ಒತ್ತುವರಿ ಮಾಡಿಕೊಳ್ಳಲು ಸಹಕರಿಸಿರುವ 20 ಅಧಿಕಾರಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಇದು ವಿಚಾರಣೆ ಹಂತದಲ್ಲಿದೆ ಎಂದು ಹೇಳಿದರು.
ನಗರದಲ್ಲಿ ಎಲ್ಲೆಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ ಎಂಬ ಬಗ್ಗೆ ಬಿಎಂಟಿಎಫ್‍ನಲ್ಲಿ ದಾಖಲೆಗಳಿವೆ. ಇದನ್ನು ತರಿಸಿಕೊಂಡು ತಕ್ಷಣವೇ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಆಯುಕ್ತರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ