71 ಗಣೇಶ ಮೂರ್ತಿಗಳ ಸಾಮೂಹಿಕ ಮೆರವಣಿಗೆ

ಬೆಂಗಳೂರು, ಸೆ.14-ಶ್ರೀ ವಿಘ್ನೇಶ್ವರ ಉತ್ಸವ ಸಮಿತಿ ವತಿಯಿಂದ ನಾಳೆ 71 ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ಮೂಲಕ ಅಲಸೂರು ಕೆರೆಯಲ್ಲಿ ವಿಸರ್ಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ಉತ್ತರ ವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್‍ಗಳು , ವೈನ್ ಶಾಪ್‍ಗಳು, ಪಬ್‍ಗಳು ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಬೇಕೆಂದು ನಗರ ಪೆÇಲೀಸ್ ಆಯುಕ್ತರಾದ ಟಿ.ಸುನಿಲ್ ಕುಮಾರ್ ಅವರು ಆದೇಶಿಸಿದ್ದಾರೆ.

ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರನೆ ದಿನ (ಸೆ.16) ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸುಮಾರು 5 ಸಾವಿರ ಮಂದಿ ಸೇರುವ ಸಾಧ್ಯತೆ ಇದ್ದು , ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ನಾಳೆ ಈ ಭಾಗದಲ್ಲಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.

ವಿಸರ್ಜನೆ ವೇಳೆ ಕಿಡಿಗೇಡಿಗಳು, ಮದ್ಯದ ಅಮಲಿನಲ್ಲಿ ದುಷ್ಕøತ್ಯವನ್ನು ನಡೆಸಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವ ಸಂಭವವಿರುವುದಾಗಿ ಗುಪ್ತ ವಾರ್ತಾ ವಿಭಾಗದ ಮಾಹಿತಿ ಮೇರೆಗೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಸಾಗುವ ಈ ಮಾರ್ಗಗಳು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇದಿಸಿ ಆದೇಶಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ