ಸಿಎಂ ಗೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು

ಬೆಂಗಳೂರು,ಸೆ.20- ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮರೆಯಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ನನ್ನ ಕೈಯಲ್ಲಿ ಅಧಿಕಾರವಿದೆ ಏನೂ ಬೇಕಾದರೂ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಕರ್ನಾಟಕದಲ್ಲಿ ನೀವು ಆಡಳಿತ ನಡೆಸುತ್ತಿರಬಹುದು. ಕೇಂದ್ರದಲ್ಲಿ ನಮ್ಮ ಪಕ್ಷವೇ ಅಧಿಕಾರದಲ್ಲಿ ಎಂಬುದನ್ನು ಮರೆತಂತಿದ್ದೀರಿ ಎಂದು ಗುಡುಗಿದರು.
ನನ್ನ ಇತಿಮಿತಿ ಏನೆಂಬುದನ್ನು ಅರಿತೇ ನಾನು ಮಾತನಾಡಿದ್ದೇನೆ. ಹದ್ದುಮೀರಿ ಮಾತನಾಡುತ್ತಿರುವುದು ನೀವು. ನಿಮ್ಮ ಈ ಧಮ್ಕಿಗೆ ನಾನು ಹೆದರುವುದಿಲ್ಲ, ಬಗ್ಗುವುದಿಲ್ಲ. ಅದೇನ್ ಮಾಡ್ಕೋತ್ತೀರೋ ಮಾಡಿಕೊಳ್ಳಿ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸ್ಥಾನವಾಗಲಿ ಅಥವಾ ಅಧಿಕಾರ ಯಾರಿಗೂ ಶಾಶ್ವತವಲ್ಲ. ಸೇಡಿನ ರಾಜಕಾರಣಕ್ಕೆ ನೀವು ಮುನ್ನುಡಿ ಬರೆದಿದ್ದೀರಿ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದರೆ ನಾನು ಸುಮ್ಮನೆ ಕೈ ಕಟ್ಟಿ ಕೂರುವುದಿಲ್ಲ. ನನಗೂ ರಾಜಕೀಯ ಮಾಡುವುದು ಗೊತ್ತು ಎಂದರು.
ನೀವು ಏನೇ ಮಾಡಿದರೂ ಅದಕ್ಕೆ ಪ್ರತಿಯಾಗಿ ನಮಗೂ ಏನು ಮಾಡಬೇಕೆಂಬುದು ಗೊತ್ತಿದೆ. ಎಂದಿಗೂ ನಾನು ಸೇಡಿನ ರಾಜಕಾರಣ ಮಾಡಿಲ್ಲ. ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಇದನ್ನೇ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಶಿವರಾಮ ಕಾರಂತ ಬಡಾವಣೆಯಲ್ಲಿ ನಾನು ಕಾನೂನು ಬಾಹಿರವಾಗಿ ಯಾವುದೇ ರೀತಿ ಕ್ರಮ ಕೈಗೊಂಡಿದ್ದರೆ ತನಿಖಾ ಸಂಸ್ಥೆಗಳು ನಿಮ್ಮ ಕೈಯಲ್ಲೇ ಇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಲು ಮೀನಾಮೇಷವೇಕೆ? ಎಂದು ಪ್ರಶ್ನಿಸಿದರು.

ಶಿವರಾಮ ಕಾರಂತ ಬಡಾವಣೆಯಲ್ಲಿ ತನಿಖೆ ನಡೆಸಿದರೆ ಸತ್ಯಾಂಶ ಜನರಿಗೆ ತಿಳಿಯಲಿದೆ. ಅಪ್ಪ-ಮಕ್ಕಳು ಮೈಸೂರಿನಲ್ಲಿ ಎಷ್ಟು ಸೈಟು ಮಾಡಿಕೊಂಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ಎಲ್ಲವನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡುತ್ತೇವೆ. ನಿಮ್ಮ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಡಿಕೆಶಿ ವಿರುದ್ಧವೂ ವಾಗ್ದಾಳಿ:
ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧವೂ ವಾಗ್ದಾಳಿ ಮಾಡಿದ ಬಿಎಸ್‍ವೈ, ನನ್ನನ್ನು ಜೈಲಿಗೆ ಹೋಗಿ ಬಂದವರು ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರ ವಿರುದ್ದವೂ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಿಮ್ಮ ಮೇಲೆ ಇಡಿ ಕೇಸ್ ದಾಖಲೆ ಮಾಡಿರುವುದಕ್ಕೂ ನಮ್ಮ ಪಕ್ಷಕ್ಕೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದರು.
ತಪ್ಪು ಮಾಡಿದವರು ಯಾರೇ ಆಗಲಿ ಶಿಕ್ಷೆ ಅನುಭವಿಸುತ್ತಾರೆ. ಅದನ್ನು ಬಿಟ್ಟು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ