ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ

ಬೆಂಗಳೂರು, ಸೆ.22-ಅತಿವೃಷ್ಠಿಯಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಯ ಜನರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಬಟ್ಟೆ, ದೈನಂದಿನ ವಸ್ತುಗಳಿಗಾಗಿ 50 ಸಾವಿರ ರೂ. ಪರಿಹಾರ ಧನ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಮನೆಗಳಿಗೆ ಎಸ್‍ಬಿಆರ್‍ಎಫ್, ಎನ್‍ಡಿಆರ್‍ಎಫ್ ಮಾರ್ಗಸೂಚಿ ಪ್ರಕಾರ ಬಟ್ಟೆಗಾಗಿ 1800, ದಿನ ಬಳಕೆ ವಸ್ತುಗಳಿಗೆ 2000 ರೂ. ಮಾತ್ರ ಕೊಡಲು ಅವಕಾಶವಿದೆ. ಈ ಹಣ ಸಾಕಾಗುವುದಿಲ್ಲ ಎಂಬುದನ್ನು ಮನಗಂಡ ಸರ್ಕಾರ ಹೆಚ್ಚುವರಿ ಪರಿಹಾರ ಧನ ನೀಡಲು ತೀರ್ಮಾನಿಸಿದೆ ಎಂದರು.
ಕೊಡಗಿನಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಪರಿಹಾರ ಧನ ಹೆಚ್ಚಿಸುವಂತೆ ಸಂತ್ರಸ್ತರು ಮಾಡಿದ್ದ ಮನವಿ ಸರ್ಕಾರ ಸ್ಪಂದಿಸಿದ್ದು,ಸಚಿವ ಸಂಪುಟದ ಒಪ್ಪಿಗೆಯೂ ದೊರೆತಿದೆ ಎಂದು ಹೇಳಿದರು.
ಕೊಡಗಿನಲ್ಲಿ 1156 ಮನೆಗಳು ತೀವ್ರವಾಗಿ ಹಾನಿಗೀಡಾಗಿವೆ. ಆ ಮನೆಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕೆ 5.78 ಕೋಟಿ ರೂ. ವೆಚ್ಚ ವಾಗಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ