ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯಬೇಕೆಂದು ತಣ್ಣಗಾಗಿದ್ದೇನೆ: ಶಾಸಕ ಎಂ.ಟಿ.ಬಿ ನಾಗರಾಜ್

MTB NAGARAJ

ಬೆಂಗಳೂರು,ಸೆ.25- ನನಗೆ ಬೇಸರವಾಗಿರುವುದು ನಿಜ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯಬೇಕು. ಹಾಗಾಗಿ ತಣ್ಣಗಾಗಿದ್ದೇನೆ. ಆದರೆ ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಹೇಳುವ ಮೂಲಕ ಶಾಸಕ ಎಂ.ಟಿ.ಬಿ ನಾಗರಾಜ್ ಕುತೂಹಲ ಕೆರಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಸರ್ಕಾರಿ ಬಂಗಲೆ ಕಾವೇರಿಯಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರಕ್ಕೆ ಸಂಬಂಧಪಟ್ಟ ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಬೇಸರವಿದೆ. ಅದನ್ನು ಸಿದ್ದರಾಮಯ್ಯನವರೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿದ್ದರಾಮಯ್ಯನವರು ಜವಾಬ್ದಾರಿಯಿಂದ ನಮ್ಮ ಕೆಲಸಗಳನ್ನು ಮಾಡಿಸಿಕೊಡಬೇಕೆಂದು ಮನವಿ ಮಾಡಿದ್ದೇವೆ. ಆ ಬಗ್ಗೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಆದರೆ ಆ ಬಗ್ಗೆಹೈಕಮಾಂಡ್ ಜೊತೆ ಮಾತನಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಹೈಕಮಾಂಡ್‍ನ ಚರಿತ್ರೆ ಎಲ್ಲರಿಗೂ ಗೊತ್ತಿರುವುದೇ. ಅವರು ಯಾರಿಗೂ ಭರವಸೆ ನೀಡುವುದಿಲ್ಲ. ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಇನ್ನು ಮುಂದೆ ನಾನು ಚೆನ್ನೈಗೂ ಹೋಗುವುದಿಲ್ಲ. ಬಾಂಬೆಗೂ ಹೋಗುವುದಿಲ್ಲ. ಬೆಂಗಳೂರಿನಲ್ಲೇ ಇರುತ್ತೇನೆ. ಸಮ್ಮಿಶ್ರ ಸರ್ಕಾರದಲ್ಲಿ ನಮಗೆ ತಾರತಮ್ಯ ಆಗುತ್ತಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸದ್ಯಕ್ಕೆ ನಾವು ಸುಮ್ಮನಾಗಿದ್ದೇವೆ. ಮುಂದೆ ಏನಾಗುತ್ತದೋ ಗೊತ್ತಿಲ್ಲ. ಸ್ವಲ್ಪ ದಿನ ಕಾದು ನೋಡಿ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ