ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಸಬೇಕು: ಹಂಪ ನಾಗರಾಜಯ್ಯ

ಬೆಂಗಳೂರು,ಅ.7-ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯನ್ನು ಕಲಿಸಬೇಕು ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು.
ನಗರದ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್.ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ನಾಡೋಜ ಪೆÇ್ರ. ಹಂಪ ನಾಗರಾಜಯ್ಯ ಅವರ 83ನೇ ಅಂತಾರಾಷ್ಟ್ರೀಯ ಶುಭಾಶಯ ಸಮಾರಂಭ ಮತ್ತು ಅವರ ಗಿಫ್ಟ್ ಆಫ್ ನಾಲೆಡ್ಜ್ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಮತ್ತು ಪೆÇೀಷಕರು ಕನ್ನಡ ಮಾಧ್ಯಮದ ಶಿಕ್ಷಣದ ಜೊತೆಗೆ ಇಂಗ್ಲಿಷ್ ಕಲಿಸಬೇಕೆಂಬ ತುಡಿತಕ್ಕೆ ಸ್ಪಂದಿಸಬೇಕು. ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಯುವ ಕಾಲ ಘಟ್ಟದಲ್ಲಿ ನಾವಿದ್ದೇವೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಸುವುದರ ಬಗ್ಗೆ ಸರ್ಕಾರ ಹಿಂದೆ ಸರಿಯಬಾರದು ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸಬೇಕೆಂದು ಹೇಳಿರುವುದು ಒಳ್ಳೆಯದು. ಎಂಥ ಪ್ರವಾಹವೇ ಬಂದರೂ ಜೀರ್ಣಿಸಿಕೊಳ್ಳುವ ಶಕ್ತಿ ಕನ್ನಡಕ್ಕಿದೆ. ಇಂಗ್ಲಿಷ್‍ನ್ನು ಶತ್ರು ಮಾಡಿಕೊಳ್ಳಬಾರದು. ಮಿತ್ರನನ್ನಾಗಿ ಮಾಡಿಕೊಳ್ಳಬೇಕು ಎಂದರು.

ಹಿರಿಯ ಸಾಹಿತಿ ಮತ್ತು ವಿಮರ್ಶಕ ಪೆÇ್ರ.ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಹಂಪ ನಾಗರಾಜಯ್ಯ ಅವರು ಬದುಕಿನ ಎಲ್ಲಾ ಶ್ರೇಣಿಗಳನ್ನು ಬಹಳ ಸಂತೋಷದಿಂದ ಅನುಭವಿಸಿಕೊಂಡು ಬಂದಿದ್ದಾರೆ. ಸಾಹಿತ್ಯದ ಮೂಲಕ ಕನ್ನಡ ನಾಡಿನಲ್ಲಿ ಹೆಸರು ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಹಂಪಾ ನಾಗರಾಜಯ್ಯ ಅವರು 75 ಕನ್ನಡ ಕೃತಿಗಳು, 25 ಇಂಗ್ಲೀಷ್ ಕೃತಿಗಳು ಸೇರಿದಂತೆ 100ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇವರ ಸಹಪಾಟಿಗಳು ಎಲ್ಲರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳಾಗಿದ್ದಾರೆ ಎಂದರು.

ಮನಸ್ಸಿಗೆ ವಯಸ್ಸಿನ ಹಂಗಿಲ್ಲ ಎಂದು ಇದೇ ವೇಳೆ ಬಾಲಸುಬ್ರಹ್ಮಣ್ಯ ನುಡಿದರು. ಹಂಪ ನಾಗರಾಜಯ್ಯ ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ ಎಂದರು.

ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಮಾತನಾಡಿ, ಹಂಪ ನಾಗರಾಜಯ್ಯನವರ ಕೊಡುಗೆ ನಮ್ಮ ನಾಡಿಗೆ , ರಾಷ್ಟ್ರಕ್ಕೆ ಅತಿ ಮುಖ್ಯವಾದದ್ದು. ಕನ್ನಡದ ಇತಿಹಾಸವನ್ನು ಜಗತ್ತಿನ ಎಲ್ಲೆಡೆ ಪಸರಿಸಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು ಸ್ವತಂತ್ರ ಅಭ್ಯರ್ಥಿಯಾಗಿ ರಾಜಕೀಯ ಪ್ರವೇಶಿಸಿ ಮುಖ್ಯಮಂತ್ರಿ, ಪ್ರಧಾನಿಯಾಗಿ ಜನರ ಸೇವೆ ಮಾಡಿದ್ದಾರೆ. ಹಂಪಾ ನಾಗರಾಜಯ್ಯನವರ ವ್ಯಕ್ತಿತ್ವ, ದೇವೇಗೌಡರ ವ್ಯಕ್ತಿತ್ವ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ