ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬಾರದೆಂದು ಸಿ.ಎಂ.ಲಿಂಗಪ್ಪ ಒತ್ತಾಯ

ಬೆಂಗಳೂರು, ಅ.9- ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬಾರದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಕ್ಬಾಲ್ ಹುಸೇನ್ ಅವರು 69 ಸಾವಿರ ಮತಗಳನ್ನು ಗಳಿಸಿದ್ದಾರೆ. ನಾನು ಈ ಹಿಂದೆ ಸ್ಪರ್ಧಿಸಿದ್ದಾಗಲೂ ಅಷ್ಟೊಂದು ಮತಗಳಿಸಿರಲಿಲ್ಲ. ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮತ ಪಡೆದಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವನ್ನು ಬಿಟ್ಟುಕೊಡುವುದು ಸರಿಯಲ್ಲ ಎಂದರು.

ಮೊದಲು ಕೆಳಹಂತದ ಕಾಂಗ್ರೆಸ್ ಘಟಕಗಳು ಉಳಿಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟವಾಗುತ್ತದೆ. ಹಾಗಾಗಿ ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದು ನಮ್ಮ ಅಭಿಪ್ರಾಯ. ಈ ಬಗ್ಗೆ ನಾವು ಹಿರಿಯ ನಾಯಕರ ಜತೆ ಚರ್ಚೆ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ