ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾದ ಬಿಜೆಪಿ

ಬೆಂಗಳೂರು, ಅ.14- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಎದುರಾಗಿರುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾಗಿದೆ.

ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ನಾಳೆಯೇ ಉಮೇದುವಾರಿಕೆ ಸಲ್ಲಿಸಲಿದ್ದು, ಅ.16ರಿಂದ ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಆರಂಭಗೊಳ್ಳಲಿದೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ, ಬಳ್ಳಾರಿ ಕ್ಷೇತ್ರದಿಂದ ಜೆ. ಶಾಂತಾ, ಮಂಡ್ಯ ಕ್ಷೇತ್ರದಿಂದ ಡಾ. ಸಿದ್ದರಾಮಯ್ಯ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಸಿ.ಎಂ. ಲಿಂಗಪ್ಪ ಪುತ್ರ ಚಂದ್ರಶೇಖರ್, ಜಮಖಂಡಿ ಕ್ಷೇತ್ರದಿಂದ ಶ್ರೀಕಾಂತ ಕುಲಕರ್ಣಿ ಅವರನ್ನು ಪಕ್ಷ ತನ್ನ ಅಭ್ಯರ್ಥಿಗಳನ್ನಾಗಿ ಆರಿಸಿಕೊಂಡಿದೆ.

ಸೋಮವಾರ ಶಿವಮೊಗ್ಗದಿಂದ ಬಿ.ವೈ. ರಾಘವೇಂದ್ರ, ರಾಮನಗರದಿಂದ ಚಂದ್ರಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳವಾರ ಬಳ್ಳಾರಿಯಿಂದ ಜೆ. ಶಾಂತಾ, ಮಂಡ್ಯದಿಂದ ಡಾ. ಸಿದ್ದರಾಮಯ್ಯ, ಜಮಖಂಡಿಯಿಂದ ಶ್ರೀಕಾಂತ ಕುಲಕರ್ಣಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇನ್ನು ಅ.16ರ ಬಳಿಕ ಬಿಜೆಪಿಯಿಂದ ಅಧಿಕೃತ ಪ್ರಚಾರ ಆರಂಭವಾಗಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ-ಚುನಾವಣೆ ಪ್ರಚಾರಕ್ಕೆ ಬಿಜೆಪಿ ಆಗಲೇ ಬಿರುಸಿನ ಪ್ರಚಾರ ಆರಂಭಿಸಿದೆ. ವಿಧಾನ ಸಭಾ ವಿಪಕ್ಷ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರವನ್ನ ಭರ್ಜರಿಯಾಗಿಯೇ ಆರಂಭಿಸಿದ್ದಾರೆ.

ಶಿಕಾರಿಪುರದಲ್ಲಿ ಇತ್ತೀಚೆಗೆ ಪಕ್ಷದ ನಾಯಕರು ಒಟ್ಟಾಗಿ ಸೇರಿ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಿಂದೇಟು ಹಾಕಿರುವುದರಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಬಹುತೇಕ ಖಾತರಿಯಾಗಿದೆ.
ಉಪ-ಚುನಾವಣೆಯನ್ನ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಬೈಂದೂರು ವಿಧಾನ ಸಭಾ ಕ್ಷೇತ್ರ ಹಾಗೂ ಶಿವಮೊಗ್ಗದ ಏಳು ವಿಧಾನ ಸಭಾ ಕ್ಷೇತ್ರ ಸೇರಿ ಒಟ್ಟು 8 ವಿಧಾನ ಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಒಂದು ಮಾತ್ರ ಕಾಂಗ್ರೆಸ್ ಕೈಯಲ್ಲಿದೆ. ಆದ್ದರಿಂದ ಇಲ್ಲಿ ಬಿಜೆಪಿ ಗೆಲುವು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಜೆಡಿಎಸ್‍ನಿಂದ ಮಧು ಬಂಗಾರಪ್ಪ ಕಣಕ್ಕಿಳಿದರೆ ಫಲಿತಾಂಶದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಗಳಾಗಿರುವ ಈಶ್ವರಪ್ಪ, ಜಿ.ಎಂ.ಸಿದ್ದೇಶ್ವರ, ಶಿವಕುಮಾರ್‍ಉದಾಸಿ, ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್ ಜೀವರಾಜ್ ಅವರು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿ ಪ್ರಚಾರದ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ.
ಇನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರನ್ನು ಗೆಲ್ಲಿಸಲು ಬೇಕಾದ ಎಲ್ಲಾ ತಯಾರಿಗಳನ್ನು ಶಾಂತಾ ಅವರ ಸಹೋದರ ಬಿ.ಶ್ರೀರಾಮುಲು ನಡೆಸುತ್ತಿದ್ದಾರೆ. ಅವರಿಗೆ ಮುಖಂಡರಾದ ರಮೇಶ್ ಜಿಗಜಿಣಗಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್ ಪ್ರಭು ಚವ್ಹಾಣ್, ರಾಮಣ್ಣ ಲಮಾಣಿ ಸಾಥ್ ನೀಡುತ್ತಿದ್ದಾರೆ.

ಇನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಅಲ್ಲಿನ ಪ್ರಚಾರದ ಉಸ್ತುವಾರಿಯನ್ನು ಮುಖಂಡರಾದ ಆರ್. ಅಶೋಕ, ಪ್ರತಾಪ್ ಸಿಂಹ, ನಾಗೇಂದ್ರ, ಡಿ.ಎಸ್.ವೀರಯ್ಯ ಅವರಿಗೆ ವಹಿಸಲಾಗಿದೆ.
ಜಮಖಂಡಿಯಿಂದ ಶ್ರೀಕಾಂತ ಕುಲಕರ್ಣಿ ಬಿಜೆಪಿಯಿಂದ ನಾಳೆ ಉಮೇದುವಾರಿಕೆ ಸಲ್ಲಿಸಲಿದ್ದು, ಪಕ್ಷದ ಮುಖಂಡರಾದ ಜಗದೀಶ ಶೆಟ್ಟರ್, ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಪಿ.ಸಿ.ಗದ್ದಿಗೌಡರ್, ಪ್ರಭಾಕರ ಕೋರೆ ಅವರು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ