ಸರ್ವಪಕ್ಷಗಳ ಸಭೆಗೆ ವಿರೋಧ ಪಕ್ಷದ ನಾಯಕರು ಗೈರು

ಬೆಂಗಳೂರು,ನ.17- ಸಂಜೆ ನಡೆಯಲಿರುವ ಮಹದಾಯಿ ನದಿನೀರು ಹಂಚಿಕೆ ಸಂಬಂಧ ಸರ್ವಪಕ್ಷಗಳ ಸಭೆಗೆ ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರು ಗೈರು ಹಾಜರಾಗಲಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಚೇರಿಗೆ ಪತ್ರ ಬರೆದಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅನ್ಯ ಕಾರ್ಯಕ್ರಮಗಳ ನಿಮಿತ್ತ ಇಂದಿನ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಪರವಾಗಿ ಮಾಜಿ ಸಚಿವರಾದ ಬಸವರಾಜ್ ಬೊಮ್ಮಾಯಿ ಹಾಗೂ ಆರ್.ಅಶೋಕ್ ಭಾಗವಹಿಸಲಿದ್ದು, ತಮ್ಮ ನಿಲುವನ್ನು ಸಭೆಯಲ್ಲಿ ತಿಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಇಂದು ಸಂಜೆ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಸಭೆ ಕರೆಯಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಾನೂನು ತಜ್ಞರು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ