ಕೆಲವೊಂದು ಕಾರಣಗಳಿಂದಾಗಿ ಸಾಲ ಮನ್ನಾ ಪ್ರಕ್ರಿಯೆ ವಿಳಂಬ; ಉಪ ಮುಖ್ಯಮಂತ್ರಿ

ಹುಬ್ಬಳ್ಳಿ, ನ.17- ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಯೋಜನೆಗೆ 1200 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಈಗಾಗಲೇ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದು, ಕೆಲವೊಂದು ಕಾರಣಗಳಿಂದಾಗಿ ಸಾಲ ಮನ್ನಾ ಪ್ರಕ್ರಿಯೆ ವಿಳಂಬವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಯೋಜನೆ ರಾಜ್ಯ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ರೈತರನ್ನು ಸಂಕಷ್ಟದಿಂದ ಪಾರುಮಾಡಲು ಈ ಯೋಜನೆಯನ್ನು ಘೋಷಿಸಲಾಗಿದೆ ಎಂದರು.

ಆ್ಯಂಬಿಡೆಂಟ್ ವಂಚನೆ ಪ್ರಕರಣದ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಮಾಜಿ ಸಚಿವ ಜನಾರ್ದನರೆಡ್ಡಿ ಅವರು 20ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿರುವ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖಾಧಿಕಾರಿಗಳು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ನೇರವಾಗಿ ಸಿಬಿಐ ತನಿಖೆ ನಡೆಸಲು ಅವಕಾಶ ಇಲ್ಲ. ಆದ್ದರಿಂದ ನಮ್ಮಲ್ಲಿ ಸಿಬಿಐ ಮೇಲೆ ನಿರ್ಬಂಧ ಹೇರುವ ಯಾವುದೇ ಪರಿಸ್ಥಿತಿ ಉದ್ಭವವಾಗಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಎಐಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಪ್ರಧಾನಿ ವಿರುದ್ಧ ಹರಿಹಾಯ್ದರು.

ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಬಲವಾದ ಸಾಕ್ಷಿಗಳು ಲಭ್ಯವಾಗಿದ್ದು, ಕಲಬುರ್ಗಿ, ಗೌರಿಲಂಕೇಶ್ ಹಾಗೂ ದಾಬೋಲ್ಕರ್, ಪನ್ಸಾರೆ ಅವರ ಹತ್ಯೆಯಲ್ಲಿ ಒಂದೇ ಗುಂಪಿನ ಕೈವಾಡವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ