ಗ್ರಾಮೀಣ ಕರ್ನಾಟಕ ಇನ್ನು ಬಯಲು ಬಹಿರ್ದೆಸೆ ಮುಕ್ತ ಕರ್ನಾಟಕ

ಬೆಂಗಳೂರು, ನ.19- ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.

ಆರೋಗ್ಯಕರ ಕರ್ನಾಟಕ ನಿರ್ಮಾಣದ ಹೆಜ್ಜೆ ಇಟ್ಟಿದ್ದು, ಗ್ರಾಮೀಣ ಭಾಗದಲ್ಲಿ ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗಿದೆ ಎಂದು ಘೋಷಣೆ ಮಾಡಿ, ನಂತರ ಸತ್ಯಮೇವ ಜಯತೆ ಎಂಬ ಭಿತ್ತಿಪತ್ರವನ್ನು ಕೂಡ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಕುಮಾರಸ್ವಾಮಿ, ಪ್ರತಿ ಗ್ರಾಮಕ್ಕೂ ಜಲಧಾರೆ ಯೋಜನೆಯಡಿ ದಿನದ 24 ಗಂಟೆಯೂ ನೀರು ಒದಗಿಸಲು ಉದ್ದೇಶಿಸಲಾಗಿದೆ. ಸುಮಾರು 60ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಪ್ರತಿ ಹಳ್ಳಿಗೂ ಭೂ ಮೇಲ್ಮೈ ನೀರನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದರು.

ಪ್ರತಿ ಕುಟುಂಬಕ್ಕೂ ಶೌಚಾಲಯ ಒದಗಿಸಬೇಕಿದೆ. ಹಾಗೆಯೇ ಪ್ರತಿ ಹಳ್ಳಿಗೂ ಕೂಡ ನೀರು ಒದಗಿಸಬೇಕು. ಪ್ರತಿ ಕುಟುಂಬವೂ ಶೌಚಾಲಯ ಬಳಸಿದಾಗ ಸತ್ಯಮೇವ ಜಯತೆ ಘೋಷಣೆಗೆ ನಿಜವಾದ ಅರ್ಥ ಸಿಗಲಿದೆ ಎಂದು ತಿಳಿಸಿದರು.
ಸಚಿವರಾದ ಬಂಡೆಪ್ಪ ಕಾಶಂಪುರ್, ಜಮೀರ್ ಅಹಮ್ಮದ್‍ಖಾನ್, ಸರ್ಕಾರದ ಮುಖ್ಯ ಸಚೇತಕ ಗಣೇಶ್‍ಹುಕ್ಕೇರಿ, ಬಾಗಲಕೋಟೆ ಜಿಪಂ ಅಧ್ಯಕ್ಷೆ ವೀಣಾ ಕಾಶಂಪ್ಪನವರ್, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತಿಕ್ ಸೇರಿದಂತೆ ಇತರೆ ಗಣ್ಯರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ