ಇಂದಿನಿಂದ ಚಿಕ್ಕಮಗಳೂರು, ಮಂಡ್ಯ ಮತ್ತು ಕೊಡಗು ಜಿಲ್ಲಯ ಪ್ರವಾಸ ಮಾಡಲಿರುವ ಸಿ.ಎಂ.

ಬೆಂಗಳೂರು, ಡಿ.6- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಚಿಕ್ಕಮಗಳೂರು, ಕೊಡಗು ಹಾಗೂ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಭತ್ತ ಕಟಾವು ಮಾಡುವ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದ್ದರು. ಆ ಭತ್ತ ಈಗ ಕಟಾವಿನ ಹಂತ ತಲುಪಿದ್ದು, ರೈತರೊಂದಿಗೆ ಭತ್ತ ಕಟಾವು ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವ ಮೂಲಕ ರೈತಪರವಾಗಿ ಸರ್ಕಾರವಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲಿದ್ದಾರೆ.

ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಆರಂಭಿಸುವ ಮುಖ್ಯಮಂತ್ರಿ, ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಗ್ಗೆ ಕೊಡಗು ಜಿಲ್ಲೆಗೆ ಪ್ರವಾಸ ಕೈಗೊಳ್ಳುವ ಮುಖ್ಯಮಂತ್ರಿಗಳು, ಮಧ್ಯಾಹ್ನ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಮನೆ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಇದೇ ಗ್ರಾಮದ ಗದ್ದೆಯಲ್ಲಿ ಮುಖ್ಯಮಂತ್ರಿ ಭತ್ತ ನಾಟಿ ಮಾಡಿದ್ದರು. ಅದನ್ನುಪರಿಶೀಲಿಸಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚೆಗೆ ನಾಲೆಗೆ ಬಸ್ ಉರುಳಿಬಿದ್ದು ದುರಂತದಲ್ಲಿ ಮೃತರಾದ ಕುಟುಂಬಗಳ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ